ಮಂಗಳೂರು: ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ಹವಾಮಾನದಿಂದಾಗಿ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು, ಅದರಲ್ಲಿದ್ದ ಆರು ಮಂದಿ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ.
ಮಂಗಳೂರಿನ ಆಳ ಸಮುದ್ರದಲ್ಲಿ ‘ಐಎಫ್ಬಿ ಮಂಜುಮಾತಾ’ ಎಂಬ ಹೆಸರಿನ ದೋಣಿಯಲ್ಲಿ ಆರು ಜನ ಮೀನುಗಾರರು ಎಂದಿನಂತೆ ಮೀನುಗಾರಿಕೆಯಲ್ಲಿ ತೊಡಗಿದ್ದರು. ಆದರೆ, ಇದ್ದಕ್ಕಿದ್ದಂತೆ ಸಮುದ್ರ ಭೀಕರವಾಗಿ ಪ್ರಕ್ಷುಬ್ಧಗೊಂಡಿದ್ದು, ದೈತ್ಯ ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್ ಒಳಗಡೆ ಭಾರಿ ಪ್ರಮಾಣದಲ್ಲಿ ನೀರು ಒಳನುಗ್ಗಲಾರಂಭಿಸಿದೆ. ನೀರಿನ ಒತ್ತಡ ಹೆಚ್ಚಾಗುತ್ತಿದ್ದಂತೆ ಬೋಟ್ ಸಮುದ್ರದಲ್ಲಿ ಮುಳುಗಲು ಪ್ರಾರಂಭವಾಗಿದೆ.

ಮೀನುಗಾರರು ಅಪಾಯದಲ್ಲಿರುವ ಮಾಹಿತಿ ಸಿಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ, ತಕ್ಷಣವೇ ಕಡಲ ಕಾವಲು ಪಡೆಯ ಅತ್ಯಾಧುನಿಕ ಹಡಗು ‘ಐಸಿಜಿಎಸ್ ಸಚೇತ್’ ಮೂಲಕ ಸ್ಥಳಕ್ಕೆ ಧಾವಿಸಿದರು. ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದ್ದರಿಂದ ದೋಣಿಯ ಹತ್ತಿರ ಹೋಗುವುದು ಸವಾಲಾಗಿತ್ತು. ಈ ಸಂದರ್ಭದಲ್ಲಿ ಕೋಸ್ಟ್ ಗಾರ್ಡ್ ಸಿಬ್ಬಂದಿ ಅತ್ಯಾಧುನಿಕ ತಂತ್ರಜ್ಞಾನವಾದ ರಿಮೋಟ್-ಆಪರೇಟೆಡ್ ಲೈಫ್ಬಾಯ್ಗಳನ್ನು ಬಳಸಿದರು.ಅತ್ಯಂತ ಸವಾಲಿನ ಪರಿಸ್ಥಿತಿಗಳ ನಡುವೆಯೂ ಕಡಲ ಶೋಧ ಮತ್ತು ರಕ್ಷಣಾ ಕಾರ್ಯವನ್ನು ಕೈಗೊಂಡಿದೆ. ಉಡುಪಿಯ “ಮಂಜು ಮಾತಾ” ಹೆಸರಿನ ಮೀನುಗಾರಿಕಾ ಬೋಟ್ನಲ್ಲಿ ಇದ್ದ ಆರು ಮಂದಿ ಮೀನುಗಾರರನ್ನು ಅಪಾಯದಿಂದ ರಕ್ಷಿಸಲಾಗಿದೆ.
33 ನಾಟಿಕಲ್ ಮೈಲ್ಸ್ ದೂರದ ಆಳ ಸಮುದ್ರದಲ್ಲಿ ನಿನ್ನೆ ರಾತ್ರಿ ನಡೆದ ಈ ಕಾರ್ಯಾಚರಣೆಯಲ್ಲಿ, ಬೋಟ್ನ ತಳಭಾಗಕ್ಕೆ ಹಾನಿಯಾಗಿ ಒಳಗೆ ಸಮುದ್ರದ ನೀರು ನುಗ್ಗುತ್ತಿದ್ದ ಕಾರಣ ಬೋಟ್ ಮುಳುಗುವ ಸ್ಥಿತಿಗೆ ತಲುಪಿತ್ತು. ಈ ಸಂದರ್ಭದಲ್ಲಿ ಮೀನುಗಾರರು ತುರ್ತು ಸಂದೇಶವನ್ನು ರವಾನಿಸಿದ್ದು, ಅದನ್ನು ಸ್ವೀಕರಿಸಿದ ಬಳಿಕ ಕೋಸ್ಟ್ ಗಾರ್ಡ್ ತಕ್ಷಣ ಕಾರ್ಯಪ್ರವೃತ್ತವಾಗಿದೆ.

ಭಾರತೀಯ ತಟ ರಕ್ಷಣಾ ಪಡೆಗೆ ಸೇರಿದ ICG ಸಚೇತ್ ಹಡಗು ಸ್ಥಳಕ್ಕೆ ಧಾವಿಸಿ, ಮುಳುಗುತ್ತಿದ್ದ ಬೋಟ್ “ಮಂಜು ಮಾತಾ”ಯನ್ನು ಪತ್ತೆಹಚ್ಚಿದೆ. ನಂತರ ಸುಮಾರು 90 ನಿಮಿಷಗಳ ಕಾಲ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ನಡುವೆಯೂ ತೀವ್ರ ಸವಾಲಿನ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ.

ರಿಮೋಟ್-ಆಪರೇಟೆಡ್ ಲೈಫ್ಬಾಯ್ಸ್ ಗಳನ್ನು ಬಳಸಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಅಪಾಯದಲ್ಲಿದ್ದ ಎಲ್ಲ ಆರು ಮಂದಿ ಜೀವ ಉಳಿಸಲಾಗಿದೆ.ಕೋಸ್ಟ್ ಗಾರ್ಡ್ ಸಿಬ್ಬಂದಿಯ ಸಮಯಪ್ರಜ್ಞೆ ಹಾಗೂ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಮೀನುಗಾರರನ್ನು ಯಶಸ್ವಿಯಾಗಿ ರಕ್ಷಿಸಲಾಗಿದ್ದು, ಅವರನ್ನು ಪ್ರಾಥಮಿಕ ಚಿಕಿತ್ಸೆ, ಆಹಾರ ಹಾಗೂ ಅಗತ್ಯ ನೆರವಿಗಾಗಿ ಮಂಗಳೂರಿನ ನ್ಯೂ ಮಂಗಳೂರು ಬಂದರಿಗೆ ಯಶಸ್ವಿಯಾಗಿ ಕರೆತರಲಾಗಿದೆ. ಸದ್ಯ ಎಲ್ಲಾ ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದು, ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.








