ಮಂಗಳೂರು : ನಗರದ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಜೂನ್ 29ರಂದು ಮುಂಜಾನೆ ಮಹಾರಾಷ್ಟ್ರದ ಕುಟುಂಬವೊಂದನ್ನು ತಡೆದು, ತಲವಾರು ತೋರಿಸಿ ಬೆದರಿಸಿ, ಚಿನ್ನಾಭರಣ ದೋಚಿ ಹೆಂಡತಿ-ಮಗನನ್ನು ಅಪಹರಿಸಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಇಂಟರ್ಸ್ಟೇಟ್ ಗ್ಯಾಂಗ್ನ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ಮೂಲದ ನಿಮಿಲ್ ಆರ್.ಕೆ (37) ಹಾಗೂ ದರೋಡೆಕೋರರಿಗೆ ಆಶ್ರಯ ಮತ್ತು ವಾಹನ ನೀಡಿ ಕೃತ್ಯಕ್ಕೆ ಸಹಕರಿಸಿದ ಕೊಡಗು ಜಿಲ್ಲೆಯ ಇರ್ಷಾದ್ (40) ಮತ್ತು ಮುಸ್ತಾಫ (49) ಬಂಧಿತ ಆರೋಪಿಗಳು.
ಮಹಾರಾಷ್ಟ್ರ ಮೂಲದ ವಿಕಾಸ್ ಸುಬ್ಬರಾವ್ ಧನವಡೆ (44) ಅವರು ಜೂನ್ 29ರಂದು ನಸುಕಿನ 2:45ರ ಸುಮಾರಿಗೆ ತಮ್ಮ ಕುಟುಂಬದೊಂದಿಗೆ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಹೆದ್ದಾರಿ ಮೂಲಕ ಕೇರಳದ ಪಯ್ಯನ್ನೂರಿಗೆ ತೆರಳುತ್ತಿದ್ದರು. ಈ ವೇಳೆ ಬೈಕಂಪಾಡಿ ಸಮೀಪ ಎರಡು ಇನ್ನೋವಾ ಹಾಗೂ ಒಂದು ಸ್ವಿಫ್ಟ್ ಕಾರಿನಲ್ಲಿ ಬಂದ 6 ರಿಂದ 7 ಜನ ಮುಸುಕುಧಾರಿ ದರೋಡೆಕೋರರು ವಿಕಾಸ್ ಅವರ ಕಾರನ್ನು ಅಡ್ಡಗಟ್ಟಿದ್ದಾರೆ. ತಲವಾರಿನಿಂದ ಹಲ್ಲೆ ನಡೆಸಿ ವಿಕಾಸ್ ಅವರನ್ನು ಗಾಯಗೊಳಿಸಿದ್ದಾರೆ. ಬಳಿಕ ಅವರ ಪತ್ನಿ ಮತ್ತು ಮಗನನ್ನು ಬಲವಂತವಾಗಿ ಅಪಹರಿಸಿ ಕೆಲ ಕಿಲೋಮೀಟರ್ ದೂರದಲ್ಲಿ ಬಿಟ್ಟಿದ್ದಾರೆ. ತದನಂತರ ಕಾರಿನಲ್ಲಿದ್ದ ₹20 ಲಕ್ಷ ಮೌಲ್ಯದ 180 ಗ್ರಾಂ ಚಿನ್ನಾಭರಣ, 2 ಮೊಬೈಲ್ ಹಾಗೂ ₹3 ಲಕ್ಷ ಮೌಲ್ಯದ ಕಾರು ಸೇರಿದಂತೆ ಒಟ್ಟು ₹23.10 ಲಕ್ಷ ಮೌಲ್ಯದ ಸೊತ್ತನ್ನು ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.








