ಮಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ನಡುವೆಯೇ, ಅಕ್ರಮವಾಗಿ ದೇಶದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳ ಪತ್ತೆಗೆ ಕೇಂದ್ರ ಸರ್ಕಾರ ಕ್ರಮಗಳನ್ನು ಬಿಗಿಗೊಳಿಸಿದೆ. ಇದರ ಭಾಗವಾಗಿ ಮಂಗಳೂರಿನ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಂಟು ಮಂದಿ ಬಾಂಗ್ಲಾದೇಶ ಮೂಲದ ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುರತ್ಕಲ್ ಸಮೀಪದ ಮುಕ್ಕದಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನ ಕಟ್ಟಡ ಕಾಮಗಾರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದವರ ದಾಖಲೆಗಳನ್ನು ಪರಿಶೀಲಿಸಿದ ವೇಳೆ, ಅವರು ಬಾಂಗ್ಲಾದೇಶ ಮೂಲದವರಾಗಿರುವುದು ಬೆಳಕಿಗೆ ಬಂದಿದೆ. ಖಚಿತ ಮಾಹಿತಿಯ ಆಧಾರದ ಮೇಲೆ ನಡೆಸಿದ ತನಿಖೆಯಲ್ಲಿ, ಸ್ಥಳೀಯ ಏಜೆಂಟರ ನೆರವಿನಿಂದ ಅಕ್ರಮವಾಗಿ ಆಧಾರ್ ಕಾರ್ಡ್ ಪಡೆದು ಇಲ್ಲಿ ನೆಲೆಸಿರುವುದು ಪತ್ತೆಯಾಗಿದೆ.
ಬಂಧಿತರನ್ನು ಅಜರುಲ್ ಇಸ್ಲಾಂ, ಮುಹಮ್ಮದ್ ರಕೀಬ್, ಜಾಹಿದ್ ಹುಸೇನ್, ಮಹಮ್ಮದ್ ಬಿಲಾಲ್ ಹುಸೇನ್, ಸೋಯೆಬ್ ಉಲ್ಲಾ, ಮಹಮ್ಮದ್ ಸಂಟುಲ್, ಮೌಕರ್ ಆಲಿ ಹಾಗೂ ಮತ್ತೋರ್ವ ಅಜರುಲ್ ಇಸ್ಲಾಂ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಬಾಂಗ್ಲಾದೇಶದ ರಾಜಶಾಹಿ ಪ್ರದೇಶದ ನಿವಾಸಿಗಳೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಇವರು ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತದ ಗಡಿ ದಾಟಿ ಪಶ್ಚಿಮ ಬಂಗಾಳದ ಮೂಲಕ ಕರ್ನಾಟಕಕ್ಕೆ ಪ್ರವೇಶಿಸಿ, ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಈ ಸಂಬಂಧ ವಿದೇಶಿಗರ ನೋಂದಣಿ ಕಚೇರಿಗೆ ಮಾಹಿತಿ ರವಾನಿಸಲಾಗಿದ್ದು, ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಗಡೀಪಾರು ಮಾಡುವ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.








