ಉಡುಪಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಗೆ ಸಂಬಂಧಿಸಿದಂತೆ ಉಡುಪಿಯ ಬ್ರಹ್ಮಗಿರಿಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು.
ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೆಲಕಾಲ ರಸ್ತೆ ತಡೆ ನಡೆಸಿದ ಪರಿಣಾಮ ಸಂಚಾರದಲ್ಲಿ ಅಲ್ಪ ವ್ಯತ್ಯಯ ಉಂಟಾಯಿತು.

ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಕರೆದೊಯ್ದರು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಧ್ವನಿ ಎತ್ತಿದ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರನ್ನು ಬಂಧಿಸಿರುವುದು ಖಂಡನೀಯ. ದೇಶದಾದ್ಯಂತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಗಂಭೀರ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದು ಸರಿಯಲ್ಲ ಎಂದು ಟೀಕಿಸಿದರು.
ಕೇಂದ್ರ ಸರ್ಕಾರವು ಪ್ರತಿಭಟನೆಗಳನ್ನು ಹತ್ತಿಕ್ಕಲು ಗೂಂಡಾಗಳನ್ನು ಬಳಸುತ್ತಿದೆ ಎಂಬ ಆರೋಪ ಮಾಡಿರುವ ಅವರು, ಈ ಬೆಳವಣಿಗೆಗಳ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು ಹಾಗೂ ಪ್ರಜಾಪ್ರಭುತ್ವ ವಿರೋಧಿ ಕ್ರಮಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ ಪ್ರಸಾದ್ ರಾಜ್ ಕಾಂಚನ್, ಎಂಎ ಗಫೂರ್ ಮತ್ತು ವೆರೋನಿಕಾ ಕಾರ್ನೆಲಿಯೊ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.








