ನವದೆಹಲಿ: ಮುಖ್ಯಮಂತ್ರಿಗಳು ದೆಹಲಿಗೆ ಬಂದು ನೀಟ್ ಹಗರಣದ ವಿರುದ್ಧ ಪ್ರತಿಭಟನೆ ಮಾಡುತ್ತಾರೆ. ಆದರೆ ಕೆಪಿಎಸ್ಸಿ ಹಗರಣದಲ್ಲಿ ಸಾವಿರಾರು ವಿದ್ಯಾರ್ಥಿಗಳು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹೋರಾಟ ಮಾಡುತ್ತಿದ್ದಾರೆ. ಅವರ ನೋವು ಮುಖ್ಯಮಂತ್ರಿಗಳಿಗೆ ಕಾಣುತ್ತಿಲ್ಲವೇ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪ್ರಶ್ನಿಸಿದ್ದಾರೆ.
ಲೋಕಸಭೆಯಲ್ಲಿ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ತಡೆ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡುವ ವೇಳೆ ಮುಖ್ಯಮಂತ್ರಿಗಳಿಗೆ ಪ್ರಶ್ನಿಸಿದ ಅವರು, “10 ದಿನಗಳ ಹಿಂದೆ ಕೆಪಿಎಸ್ಸಿ ಅಧ್ಯಕ್ಷರನ್ನು ಅಮಾನತು ಮಾಡಲಾಗಿದೆ. ತಮ್ಮ ಮಕ್ಕಳಿಗೆ ನಕಲಿ ದಾಖಲೆಗಳನ್ನು ಮಾಡಿಸಿರುವ ಆರೋಪದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಇತ್ತೀಚೆಗೆ ವೆಟರ್ನರಿ ಕಾಲೇಜಿನಲ್ಲಿ ಒಂದೊಂದು ಸೀಟಿಗೆ ೮೦ ಲಕ್ಷ ರೂ. ವಸೂಲಿ ಮಾಡಿದ ಹಗರಣವೂ ನಡೆದಿದೆ. ಅನ್ಯಾಯಕ್ಕೊಳಗಾದ ಪ್ರತಿಯೊಬ್ಬ ವಿದ್ಯಾರ್ಥಿಯ ಪರವಾಗಿ ನಾನು ಮಾತನಾಡುತ್ತಿದ್ದೇನೆ. ಈ ಎಲ್ಲ ವಿಚಾರಗಳ ಬಗ್ಗೆ ಸಿಎಂ ಉತ್ತರ ನೀಡಬೇಕು” ಎಂದು ಕೇಳಿದ್ದಾರೆ.
“ದೇಶದ ಯುವಕರು ರಾಜಕೀಯ ಆರೋಪ-ಪ್ರತ್ಯಾರೋಪಗಳನ್ನು ನೋಡುತ್ತಿಲ್ಲ. ಅವರಿಗೆ ನ್ಯಾಯಯುತ ಪರೀಕ್ಷಾ ವ್ಯವಸ್ಥೆ ಮತ್ತು ಶಾಶ್ವತ ಪರಿಹಾರ ಬೇಕು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರಲಿದೆ ಎಂಬ ನಂಬಿಕೆ ವಿದ್ಯಾರ್ಥಿಗಳಲ್ಲಿದೆ” ಎಂದು ತಿಳಿಸಿದರು.
“ಇಡೀ ದೇಶದ ಯುವಕರು ಸಂಸತ್ತಿನ ಚರ್ಚೆಯನ್ನು ಗಮನಿಸುತ್ತಿದ್ದಾರೆ. ಇಲ್ಲಿ ನಡೆಯುವ ಪರಸ್ಪರ ಆರೋಪಗಳಿಂದ ಅವರಿಗೆ ಯಾವುದೇ ಪ್ರಯೋಜನವಿಲ್ಲ. ಹಿಂದೆ ಏನಾಯಿತು ಎಂಬುದಕ್ಕಿಂತ ಈಗ ಸಮಸ್ಯೆಗೆ ಪರಿಹಾರ ಸಿಗಬೇಕು ಎಂಬುದೇ ವಿದ್ಯಾರ್ಥಿಗಳ ನಿರೀಕ್ಷೆ. ಪೇಪರ್ ಲೀಕ್ನಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದೆ. ಸಾಮಾನ್ಯ ಮತ್ತು ಬಡ ಕುಟುಂಬಗಳ ಮಕ್ಕಳಿಗೆ ನ್ಯಾಯಯುತ ಪರೀಕ್ಷಾ ವ್ಯವಸ್ಥೆಯೇ ಬದುಕು ಕಟ್ಟಿಕೊಳ್ಳುವ ದೊಡ್ಡ ಅವಕಾಶವಾಗಿದೆ. ಅದನ್ನು ಕಾಪಾಡುವುದು ಎಲ್ಲರ ಜವಾಬ್ದಾರಿ” ಎಂದು ಹೇಳಿದರು.
“ಇಂದಿನ ಶಿಕ್ಷಣ ಪದ್ಧತಿ ಮಕ್ಕಳನ್ನು ಕೇವಲ ರಟ್ಟೆ ಹೊಡೆದು ಪರೀಕ್ಷೆ ಬರೆಯುವಂತೆ ಮಾಡುತ್ತಿದೆ. ಒಂದು ದಿನದ ಮೂರು ಗಂಟೆಯ ಪರೀಕ್ಷೆ ವಿದ್ಯಾರ್ಥಿಯ ಇಡೀ ಭವಿಷ್ಯವನ್ನು ನಿರ್ಧರಿಸಬಾರದು. ಈ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ ಅಗತ್ಯ” ಎಂದರು.








