ಮಂಗಳೂರು: ಬಂಟ್ವಾಳದ ವೃದ್ಧೆಯೋರ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜು. 28ರಂದು ಆದೇಶ ಹೊರಡಿಸಿರುತ್ತದೆ.
ಬಂಟ್ವಾಳ ಅಮ್ಟಾಡಿ ನಿವಾಸಿ ಕು.ಏಲ್ಮಾ ಪ್ರೆಶ್ಚಿತ್ ಬರೆಟ್ರೋ (23), ಬಂಟ್ವಾಳ ನರಿಕೊಂಬು ನಿವಾಸಿ ಸತೀಶ ನಾಯಕ್ (28) ಹಾಗೂ ಚರಣ್ ಕುಮಾರ್ (31) ಜೀವಾವಧಿ ಶಿಕ್ಷೆಗೊಳಗಾದ ಆರೋಪಿಗಳು.
ಬಂಟ್ವಾಳ ಅಮ್ಮುಂಜೆ ನಿವಾಸಿಯಾದ ವೃದ್ಧೆ ಬೆನಡಿಕ್ಟ್ ಕಾರ್ಲೋ (73) ಎಂಬುವವರನ್ನ ಆರೋಪಿ ಕು.ಏಲ್ಮಾ ಪ್ರೆಶ್ಚಿತ್ ಬರೆಟ್ರೋ ನೋಡಿಕೊಳ್ಳುತ್ತಿದ್ದಳು. ವೃದ್ಧೆಯ ಬಳಿಯಿದ್ದ ಚಿನ್ನಾಭರಣಗಳನ್ನು ಸುಲಿಗೆ ಮಾಡುವ ಉದ್ದೇಶದಿಂದ, ತನ್ನ ಸ್ನೇಹಿತ ಸತೀಶ ನಾಯಕ್ ಎಂಬಾತನ ಸಹಾಯದಿಂದ ವೃದ್ದೆ ಸೇವಿಸುವ ಆಹಾರದಲ್ಲಿ ವಿಷ ಬೆರೆಸಿ ಕೊಲ್ಲಲು ಯತ್ನಿಸಿದ್ದಾಳೆ. ಆದರೆ ಸಫಲರಾಗದಿದ್ದಾಗ ಮತ್ತೋರ್ವ ಆರೋಪಿ ಚರಣ್ ಕುಮಾರ್ ಎಂಬಾತನ ಸಹಾಯದಿಂದ 2021ರ ಜನವರಿ 25ರಂದು ರಾತ್ರಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಲಾಗಿರುತ್ತದೆ.
ವೃದ್ಧೆಯ ಕೊಲೆ ಮಾಡಿದ ಬಳಿಕ ಆರೋಪಿಗಳು ಆಕೆಯ ಬಳಿಯಿದ್ದ ಒಟ್ಟು 61.070ಗ್ರಾಂ ತೂಕದ (ಅಂದಿನ ರೂ.3 ಲಕ್ಷ ಮೌಲ್ಯ) ಚಿನ್ನಾಭರಣಗಳನ್ನು ಸುಲಿಗೆ ಮಾಡಿ, ಸಾಕ್ಷಿ ನಾಶಪಡಿಸಿರುತ್ತಾರೆ. ಈ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ22/2021, ಕಲಂ: 302, 392, 120 (ಬಿ), 201 ಜೊತೆಗೆ 34 ಐಪಿಸಿ ರಂತೆ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದಲ್ಲಿ ಆಗಿನ ಬಂಟ್ವಾಳ ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಪ್ರಸನ್ನ ಎಮ್.ಎಸ್ ರವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಆಗಿನ ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕರಾದ ಟಿ.ಡಿ. ನಾಗರಾಜ್ ರವರು ಪ್ರಕರಣದ ತನಿಖೆ ನಡೆಸಿ, ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ, ಮೂವರು ಆರೋಪಿಗಳ ವಿರುದ್ಧ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಇದೀಗ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು ಪ್ರಕರಣದ ಮೂವರೂ ಆರೋಪಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿರುತ್ತಾರೆ. ಸರ್ಕಾರಿ ಅಭಿಯೋಜಕರಾದ ಜ್ಯೋತಿ ಪ್ರಮೋದ್ ನಾಯಕ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದಾರೆ.








