ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಎಸ್ಐಆರ್ (SIR) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿರುವ ಬೆನ್ನಲ್ಲೇ, ಸ್ಯಾಂಡಲ್ವುಡ್ ಹಾಗೂ ಬಹುಭಾಷಾ ಹಿರಿಯ ನಟ ಪ್ರಕಾಶ್ ರಾಜ್ ಅವರ ವೋಟರ್ ಐಡಿ (ಮತದಾರರ ಗುರುತಿನ ಚೀಟಿ) ರದ್ದಾಗಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿರುವ ನಟ ಪ್ರಕಾಶ್ ರಾಜ್, ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. ಎಸ್ಐಆರ್ ಪ್ರಕ್ರಿಯೆಯ ನೆಪದಲ್ಲಿ ಬೆಂಗಳೂರು ನಗರ ಒಂದರಲ್ಲೇ ಸುಮಾರು 65 ಲಕ್ಷ ಜನರ ಮತದಾರರ ಹಕ್ಕನ್ನು ಕಸಿದುಕೊಳ್ಳಲಾಗಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
ಹಂಚಿಕೊಂಡಿರುವ ವಿಡಿಯೋದಲ್ಲಿ ತಮ್ಮ ಅಸಮಾಧಾನ ಹೊರಹಾಕಿರುವ ಪ್ರಕಾಶ್ ರಾಜ್, “ನಾನು ಹುಟ್ಟಿ ಬೆಳೆದ ಸ್ವಕ್ಷೇತ್ರದಲ್ಲಿಯೇ ನನ್ನ ಮತದಾನದ ಹಕ್ಕನ್ನು ತೆಗೆದುಹಾಕಲಾಗಿದೆ. ಇದೇ ಕ್ಷೇತ್ರದಲ್ಲಿ ನಾನು ಈ ಹಿಂದೆ ಲೋಕಸಭಾ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆ. ಇಷ್ಟೆಲ್ಲಾ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರೂ ಸಹ ನನ್ನ ಹೆಸರನ್ನು ಮತದಾರರ ಪಟ್ಟಿಯಿಂದ ಏಕಾಏಕಿ ಕೈಬಿಟ್ಟಿರುವುದು ಆಶ್ಚರ್ಯ ತಂದಿದೆ. ಇದು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ದೊಡ್ಡ ಜೋಕ್ ಅಲ್ಲದೆ ಮತ್ತೇನು?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಿರುವುದಕ್ಕೆ ಸೂಕ್ತ ಸ್ಪಷ್ಟನೆ ನೀಡಬೇಕೆಂದು ಅವರುತಮ್ಮ ಎಕ್ಸ್ ಖಾತೆಯ ಮೂಲಕ ಚುನಾವಣಾ ಆಯೋಗಕ್ಕೆ ಸವಾಲು ಎಸೆದಿದ್ದಾರೆ. ಜವಾಬ್ದಾರಿಯುತ ನಾಗರಿಕರ ಹಾಗೂ ಸಾರ್ವಜನಿಕವಾಗಿ ಗುರುತಿಸಿಕೊಂಡ ವ್ಯಕ್ತಿಗಳ ಮತಗಳೇ ಈ ರೀತಿ ನಾಪತ್ತೆಯಾಗುತ್ತಿದ್ದರೆ, ಸಾಮಾನ್ಯ ಜನರ ಸ್ಥಿತಿ ಏನು ಎಂಬ ಪ್ರಶ್ನೆ ಈಗ ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಕೇಳಿಬರುತ್ತಿದೆ. ನಟನ ಈ ವಿಡಿಯೋ ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಚುನಾವಣಾ ಆಯೋಗದ ನಡೆಗೆ ಹಲವರಿಂದ ಟೀಕೆಗಳು ವ್ಯಕ್ತವಾಗುತ್ತಿವೆ.








