ಮಂಗಳೂರು/ಉಳ್ಳಾಲ: ಕೋಟೆಕಾರು ಬೀರಿಯಲ್ಲಿ ನಿರ್ಮಾಣ ಹಂತದ ಬಹುಮಹಡಿ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ವಲಸೆ ಕಾರ್ಮಿಕರು ಆಕಸ್ಮಿಕವಾಗಿ ಕೆಳಗೆ ಬಿದ್ದು ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಓರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿದೆ.
ಉಚ್ಚಿಲ ಅಜ್ಜಿನಡ್ಕದಲ್ಲಿ ಹೋಲ್ಸೇಲ್ ಬೇಕರಿ ಉತ್ಪನ್ನಗಳನ್ನು ತಯಾರಿಸುವ ವಿಜಿ ಸ್ವೀಟ್ಸ್ ಮಾಲೀಕ ಉದಯ ಕುಮಾರ್ ಅವರ ಮಾಲೀಕತ್ವದ ಬೀರಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಈ ಘಟನೆ ನಡೆದಿದೆ. ದೆಹಲಿ ಮೂಲದ ಶಾಕೀರ್ (32) ಹಾಗೂ ಹೈದರ್ (33) ಗಾಯಗೊಂಡ ಕಾರ್ಮಿಕರು.
ಐದು ಮಹಡಿಯ ಕಟ್ಟಡದ ಎರಡನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರೂ ಆಕಸ್ಮಿಕವಾಗಿ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಪರಿಣಾಮ ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಕೀರ್ ಅವರ ಸ್ಥಿತಿ ಗಂಭೀರವಾಗಿದ್ದು, ಇಬ್ಬರಿಗೂ ಚಿಕಿತ್ಸೆ ಮುಂದುವರಿದಿದೆ.
ಘಟನೆಯ ಮಾಹಿತಿ ತಿಳಿದ ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.








