ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಕಡಬ ತಾಲೂಕಿನ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲೂ ಮಳೆಯ ಅಬ್ಬರ ಹೆಚ್ಚಾಗಿದೆ.

ಭಾರೀ ಮಳೆಯಿಂದಾಗಿ ಆದಿ ಸುಬ್ರಹ್ಮಣ್ಯ ದೇವಸ್ಥಾನ ಜಲಾವೃತಗೊಂಡಿದ್ದು, ದೇವಸ್ಥಾನಕ್ಕೆ ತೆರಳುವ ಸಂಪರ್ಕ ಮಾರ್ಗಕ್ಕೂ ನೀರು ನುಗ್ಗಿದೆ. ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಸಂಗ್ರಹವಾಗಿದ್ದು, ಪಕ್ಕದಲ್ಲಿರುವ ವಸತಿ ಗೃಹಗಳು ಹಾಗೂ ಅಂಗಡಿ-ಮುಂಗಟ್ಟುಗಳಿಗೂ ನೀರು ನುಗ್ಗಿರುವುದು ವರದಿಯಾಗಿದೆ.
ಇದೇ ವೇಳೆ ರಸ್ತೆಗಳಿಗೂ ನೀರು ಹರಿದು ಬಂದಿದ್ದು, ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗಿದೆ. ನಿರಂತರ ಮಳೆಯ ಪರಿಣಾಮ ಕುಮಾರಧಾರ ನದಿ ಉಕ್ಕಿ ಹರಿಯುತ್ತಿದೆ.









