ಯಾವುದೇ ಬೀದಿಬದಿ ವ್ಯಾಪಾರಿಗಳನ್ನು ಕಾನೂನುಬಾಹಿರವಾಗಿ ಹಾಗೂ ಏಕಾಏಕಿ ತೆರವುಗೊಳಿಸುವಂತೆ ಸರ್ವೋಚ್ಚ ನ್ಯಾಯಾಲಯ ಆದೇಶಿಸಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಬೀದಿಬದಿ ವ್ಯಾಪಾರಿಗಳ ಹಿತರಕ್ಷಣಾ ಕಾಯ್ದೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಪುನರ್ವಸತಿ ಕಲ್ಪಿಸದೆ ನಡೆಸುವ ತೆರವು ಕಾರ್ಯಾಚರಣೆ ಸರಿಯಲ್ಲ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ದಾಖಲಿಸಿದ್ದ ಪ್ರಕರಣವನ್ನು ಪ್ರಶ್ನಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ಕಾರ್ಯಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಪರವಾಗಿ ಹಿರಿಯ ವಕೀಲ ಎಸ್. ಬಾಲನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಪ್ರಕರಣದ ಹಿನ್ನೆಲೆ
ಮಂಗಳೂರು ಟೌನ್ ಹಾಲ್ ಬಳಿಯ ಪಾದಚಾರಿ ಮಾರ್ಗದಲ್ಲಿದ್ದ ‘ಸಂಡೇ ಬಜಾರ್’ ಬೀದಿ ವ್ಯಾಪಾರಿಗಳ ಅಂಗಡಿಗಳನ್ನು ಸುಪ್ರೀಂ ಕೋರ್ಟ್ ಆದೇಶದ ನೆಪವೊಡ್ಡಿ ಮಹಾನಗರ ಪಾಲಿಕೆ ತೆರವುಗೊಳಿಸಲು ಮುಂದಾಗಿತ್ತು. ಈ ವೇಳೆ ಸಂಘದ ಕಾರ್ಯಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಹಾಗೂ ಇತರ ಪದಾಧಿಕಾರಿಗಳು ತೆರವು ಕಾರ್ಯಾಚರಣೆಯನ್ನು ಪ್ರಶ್ನಿಸಿ, ನಿಯಮಾನುಸಾರ ನಡೆಯುವಂತೆ ಮನವಿ ಮಾಡಿದ್ದರು. ಇದನ್ನು ಕರ್ತವ್ಯಕ್ಕೆ ಅಡ್ಡಿ ಹಾಗೂ ಹಲ್ಲೆ ಎಂದು ಆರೋಪಿಸಿ ಮಂಗಳೂರು ಮಹಾನಗರ ಪಾಲಿಕೆ ವಲಯ ಆಯುಕ್ತರು (ಪ್ರಭಾರ) ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು.
ಅರ್ಜಿದಾರರ ಪರ ಬಲವಾದ ವಾದ
ಅರ್ಜಿದಾರರ ಪರ ವಕೀಲರಾದ ಎಸ್. ಬಾಲನ್ ಮತ್ತು ರಕ್ಷಿತಾ ಸಿಂಗ್ ವಾದ ಮಂಡಿಸಿ, “ಪಾಲಿಕೆ ಅಧಿಕಾರಿಗಳು ಯಾವುದೇ ಮುನ್ಸೂಚನಾ ನೋಟಿಸ್ ನೀಡದೆ ಅಕ್ರಮವಾಗಿ ಅಂಗಡಿಗಳನ್ನು ಧ್ವಂಸಗೊಳಿಸಿದ್ದಾರೆ. ವಾರಕ್ಕೊಮ್ಮೆ ನಡೆಯುವ ಸಂಡೇ ಬಜಾರ್ ಶಾಶ್ವತ ಅತಿಕ್ರಮಣವಲ್ಲ. ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಪಾದಚಾರಿ ಮಾರ್ಗದ ಮೂಲಸೌಕರ್ಯ ಕಲ್ಪಿಸುವುದಕ್ಕಷ್ಟೇ ಸೀಮಿತವಾಗಿದ್ದು, ಬೀದಿಬದಿ ವ್ಯಾಪಾರಿಗಳ ರಕ್ಷಣಾ ಕಾಯ್ದೆ 2014ನ್ನು ರದ್ದುಗೊಳಿಸಿಲ್ಲ. ಇಡೀ ಘಟನೆ ವಿಡಿಯೋದಲ್ಲಿದ್ದು, ಯಾವುದೇ ಹಲ್ಲೆ ನಡೆದಿಲ್ಲ. ಪಾಲಿಕೆಯು ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಸಂಘಟನೆಯ ಪ್ರತಿನಿಧಿಗಳ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಕಾನೂನನ್ನು ದುರುಪಯೋಗಪಡಿಸಿಕೊಂಡಿದೆ” ಎಂದು ವಿವರಿಸಿದರು.
ಹೈಕೋರ್ಟ್ ಕಟು ಮಾತು
ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, “ಸುಪ್ರೀಂ ಕೋರ್ಟ್ ಆದೇಶ ಇರುವುದು ರಸ್ತೆಗಳ ಜತೆಗೆ ಸೂಕ್ತ ಫುಟ್ಪಾತ್ ನಿರ್ವಹಣೆ ಮಾಡಬೇಕು ಎಂಬುದಕ್ಕೆ ಮಾತ್ರ. ಬೀದಿಬದಿ ವ್ಯಾಪಾರಿಗಳ ಹಿತರಕ್ಷಣಾ ಕಾಯ್ದೆ ಇಂದಿಗೂ ಜಾರಿಯಲ್ಲಿದ್ದು, ಅವರಿಗೆ ವ್ಯಾಪಾರ ಮಾಡುವ ಹಕ್ಕಿದೆ. ಪುನರ್ವಸತಿ ವ್ಯವಸ್ಥೆ ಮತ್ತು ಕಾಯ್ದೆಯಲ್ಲಿನ ನಿಯಮಗಳನ್ನು ಪಾಲಿಸದೆ ತೆರವು ಮಾಡುವುದು ಕಾನೂನುಬಾಹಿರ” ಎಂದು ತಿಳಿಸಿದರು.








