ಹಳೆಯಂಗಡಿ : ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಬಸ್ ನಿಲ್ದಾಣದ ಬಳಿ ಎಕ್ಸ್ಪ್ರೆಸ್ ಖಾಸಗಿ ಬಸ್ಗಳ ಚಾಲಕರು ಹಾಗೂ ನಿರ್ವಾಹಕರ ನಡುವೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ವಿಚಾರದಲ್ಲಿ ತೀವ್ರ ಪೈಪೋಟಿ ನಡೆದಿದ್ದು, ಅಪಾಯಕಾರಿ ರೀತಿಯಲ್ಲಿ ಬಸ್ಗಳನ್ನು ಚಲಾಯಿಸಿದ ಘಟನೆ ಮಂಗಳವಾರ ಸಂಭವಿಸಿದೆ.
ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಎರಡು ಖಾಸಗಿ ತಡೆರಹಿತ ಬಸ್ಗಳ ಸಿಬ್ಬಂದಿ ನಡುವೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ವಿಚಾರದಲ್ಲಿ ಹೆದ್ದಾರಿಯಲ್ಲೇ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಎರಡೂ ಬಸ್ಗಳನ್ನು ಚಾಲಕರು ಅತ್ಯಂತ ಅಪಾಯಕಾರಿಯಾಗಿ ಚಲಾಯಿಸಿಕೊಂಡು ಬಂದು ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಮುಗಿಬಿದ್ದಿದ್ದಾರೆ. ಇದರಿಂದಾಗಿ ಕೆಲಕಾಲ ಹೆದ್ದಾರಿಯಲ್ಲಿ ಸಾರ್ವಜನಿಕರು ಹಾಗೂ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಹಳೆಯಂಗಡಿ ಬಸ್ ನಿಲ್ದಾಣದ ಬಳಿ ತಡೆರಹಿತ ಬಸ್ಗಳ ಚಾಲಕ ಹಾಗೂ ನಿರ್ವಾಹಕರ ನಡುವೆ ‘ಟೈಮಿಂಗ್ಸ್’ ವಿಚಾರಕ್ಕೆ ಸಂಬಂಧಿಸಿದಂತೆ ಆಗಾಗ್ಗೆ ಗಲಾಟೆಗಳು ನಡೆಯುತ್ತಿರುತ್ತವೆ. ಇಂತಹ ಪೈಪೋಟಿಯಿಂದಾಗಿ ಈ ಹಿಂದೆ ಸಣ್ಣಪುಟ್ಟ ಹಲ್ಲೆ ಪ್ರಕರಣಗಳೂ ವರದಿಯಾಗಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಪ್ರಯಾಣಿಕರ ಸುರಕ್ಷತೆಯನ್ನು ಗಾಳಿಗೆ ತೂರಿ ಹೆದ್ದಾರಿಯಲ್ಲೇ ಬಸ್ಗಳ ನಡುವೆ ಈ ರೀತಿ ಜೀವಮಾನದ ಪೈಪೋಟಿ ನಡೆಸುವುದು ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ. ಯಾವುದೇ ದೊಡ್ಡ ಅನಾಹುತ ಸಂಭವಿಸುವ ಮುನ್ನವೇ ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು. ನಿಯಮ ಮೀರಿ ಅಪಾಯಕಾರಿಯಾಗಿ ಚಾಲನೆ ಮಾಡುವ ಬಸ್ ಚಾಲಕರು ಹಾಗೂ ನಿರ್ವಾಹಕರಿಗೆ ಸಂಚಾರ ನಿಯಮ ಮತ್ತು ಪ್ರಯಾಣಿಕರ ಸುರಕ್ಷತೆ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಸ್ಥಳೀಯರು ತೀವ್ರವಾಗಿ ಆಗ್ರಹಿಸಿದ್ದಾರೆ.








