ಉಡುಪಿ:ಪಡಿತರ ಅಕ್ಕಿ ಚೀಲಗಳನ್ನು ಮನೆಯ ಅಂಗಳದಲ್ಲಿ ಇಟ್ಟಿರುವುದಾಗಿ ಆರೋಪಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಕರಣದಲ್ಲಿ ದೂರುದಾರರಿಗೆ ಬೆದರಿಕೆ ಒಡ್ಡಿ ಸುಲಿಗೆಗೆ ಬೆದರಿಕೆ ಹಾಕಿದ ಆರೋಪಿಗಳಾದ ಕೋಟತಟ್ಟು ಗ್ರಾಮದ ನಾಗೇಂದ್ರ ಪುತ್ರನ್ (37), ಪಾರಂಪಳ್ಳಿ ಗ್ರಾಮದ ಪಡುಕೆರೆಯ ನಿವಾಸಿ ಪಿ.ಸುಮಂತ್ ಕುಂದರ್ (40) ಅವರನ್ನು ಸೆ.2ರಂದು ಮೈಸೂರು ಅರಮನೆ ಎದುರಿನ ವಸ್ತು ಪ್ರದರ್ಶನ ಮೈದಾನದ ಬಳಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಇದೇ ಪ್ರಕರಣದ ಮತ್ತೋರ್ವ ಆರೋಪಿ ಮೂಡುಹಡು ಗ್ರಾಮದ ಸಚಿನ್ ಶ್ರೀಯಾನ್ (32)ನನ್ನು ಸೆ.1ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಪ್ರಕರಣದ ತನಿಖೆ ಮುಂದುವರಿದಿದೆ.
ಆ.31ರಂದು ಈ ಘಟನೆ ನಡೆದಿದ್ದು, ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ಆರೋಪಿಗಳ ಪತ್ತೆಗಾಗಿ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಕೋಟ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ಕುಮಾರ್ ಆರ್., ಪಿಎಸ್ಐ (ಕಾ.ಸು.) ಮಹಾಂತೇಶ ಜಾಬಗೌಡ (ತನಿಖೆ) ನೇತೃತ್ವದಲ್ಲಿ ಪೊಲೀಸ್ ಸಿಬಂದಿ ವಿಜಯೇಂದ್ರ, ಶರತ್ ಹಾಗೂ ಶಿವರಾಜ್ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ.








