ಮಂಗಳೂರು: ನಾಗರಿಕರ ವೈಯಕ್ತಿಕ ಹಾಗೂ ಗೌಪ್ಯ ಮಾಹಿತಿಯನ್ನು ಕಾನೂನುಬಾಹಿರವಾಗಿ ಸಂಗ್ರಹಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ (KSHRC) ತನಿಖೆಗೆ ಆದೇಶಿಸಿದೆ. ಅಮಾನತಿನಲ್ಲಿರುವ ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಹಾಗೂ ಮಂಗಳೂರು ಉತ್ತರ (ಪಣಂಬೂರು) ವಿಭಾಗದ ಎಸಿಪಿ ಶ್ರೀಕಾಂತ್ ಅವರ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಆಯೋಗ ನಿರ್ದೇಶನ ನೀಡಿದೆ.
ಈ ಕುರಿತು ಪ್ರಕರಣ ಸಂಖ್ಯೆ 3141/10/21/2026 ಅಡಿಯಲ್ಲಿ ವಿಚಾರಣೆ ನಡೆಯುತ್ತಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಚೋಳ್ಯಾಡಿ ರಸ್ತೆ ನಿವಾಸಿ ಸುಮತಿ ನಾಯ್ಕ್ ಅವರು KSHRCಗೆ ದೂರು ಸಲ್ಲಿಸಿದ್ದರು.
ದೂರಿನಲ್ಲಿ, ತಮ್ಮ ಗಮನಕ್ಕೆ ತರದೆ ಆಧಾರ್ ಸಂಖ್ಯೆ, ಮೊಬೈಲ್ ವಿವರ, ಪಾಸ್ಪೋರ್ಟ್ ಸೇರಿದಂತೆ ವೈಯಕ್ತಿಕ ಹಾಗೂ ಅತ್ಯಂತ ಗೌಪ್ಯ ದತ್ತಾಂಶಗಳನ್ನು NATGRID ವ್ಯವಸ್ಥೆಯ ಮೂಲಕ ಅಕ್ರಮವಾಗಿ ಸಂಗ್ರಹಿಸಲಾಗಿದೆ ಎಂದು ಆರೋಪಿಸಲಾಗಿದೆ.
ದೂರು ಹಾಗೂ ಅದರಲ್ಲಿನ ಆರೋಪಗಳನ್ನು ಪರಿಶೀಲಿಸಿದ ಬಳಿಕ KSHRC ಸದಸ್ಯ ಎಸ್.ಕೆ. ವಂಟಿಗೋಡಿ ಅವರು ತನಿಖೆಗೆ ಆದೇಶಿಸಿ ಅಧಿಕೃತ ನಿರ್ದೇಶನ ಹೊರಡಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತರು ಹಿರಿಯ ಪೊಲೀಸ್ ಅಧಿಕಾರಿಯ ಮೂಲಕ ಈ ಬಗ್ಗೆ ಸಮಗ್ರ ವಿಚಾರಣೆ ನಡೆಸಿ, ಅಗತ್ಯವಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಂಡು ಆಯೋಗಕ್ಕೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಅಕ್ಟೋಬರ್ 06, 2026ರೊಳಗೆ ತನಿಖಾ ವರದಿಯನ್ನು ಆಯೋಗಕ್ಕೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಲಾಗಿದೆ. ಬಳಿಕ ಪ್ರಕರಣದ ಮುಂದಿನ ವಿಚಾರಣೆ ಹಾಗೂ ತನಿಖಾ ವರದಿಯ ಪರಿಶೀಲನೆಯನ್ನು ಅಕ್ಟೋಬರ್ 07, 2026ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.
ನಾಗರಿಕರ ವೈಯಕ್ತಿಕ ಮಾಹಿತಿಯ ಗೌಪ್ಯತೆ ಹಾಗೂ ಅದರ ಬಳಕೆಗೆ ಸಂಬಂಧಿಸಿದಂತೆ ಗಂಭೀರ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ KSHRCನ ಈ ತನಿಖಾ ಆದೇಶ ಮಹತ್ವ ಪಡೆದಿದೆ. ತನಿಖೆಯ ಬಳಿಕ ಆರೋಪಗಳ ಸತ್ಯಾಸತ್ಯತೆ ಹಾಗೂ ಯಾವುದೇ ಕಾನೂನು ಉಲ್ಲಂಘನೆಯಾಗಿದೆಯೇ ಎಂಬುದು ಸ್ಪಷ್ಟವಾಗಬೇಕಿದೆ.








