ಮಂಗಳೂರು: ಬಂಟ್ವಾಳ ತಾಲೂಕಿನ ಮಡಿಯಾಲ ಗ್ರಾಮದಲ್ಲಿ ಇದೇ ನವೆಂಬರ್ನಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಉನ್ನತ ಶಿಕ್ಷಣ ಕೇಂದ್ರ ಆರಂಭವಾಗಲಿದೆ. 2027ರ ಜೂನ್ನಿಂದ ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ‘ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್’ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ತಿಳಿಸಿದ್ದಾರೆ.
ಮಡಿಯಾಲ ಲೋಕಸೇವಾ ವೃಂದದ ಸಂಸ್ಥಾಪಕ ಮಡಿಯಾಲ ನಾರಾಯಣ ಭಟ್ಟರ ಹುಟ್ಟೂರು. ಅವರ ಜನ್ಮಶತಮಾನೋತ್ಸವದ ಅಂಗವಾಗಿ, ಅವರ ಸ್ಮರಣಾರ್ಥವಾಗಿ ಈ ಉನ್ನತ ಶಿಕ್ಷಣ ಕೇಂದ್ರವನ್ನು ಆರಂಭಿಸಲಾಗುತ್ತಿದೆ ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಹೇಳಿದ್ದಾರೆ.
ಮಂಗಳೂರಿನಲ್ಲಿ ನಡೆದ ‘ದಿವ್ಯ ಸಂಜೆ’ ಸಂವಾದ ಕಾರ್ಯಕ್ರಮದಲ್ಲಿ ಉದ್ಯಮಿ ಉಲ್ಲಾಸ್ ಕಾಮತ್ ಅವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಮಂಗಳೂರು ನಗರದಲ್ಲಿ ಈಗಾಗಲೇ ಹಲವು ಬಗೆಯ ಶಿಕ್ಷಣ ಕೋರ್ಸ್ಗಳು ಲಭ್ಯವಿದ್ದು, ಇದಕ್ಕೆ ಮತ್ತಷ್ಟು ಹೊಸ ಆಯಾಮ ನೀಡುವ ಉದ್ದೇಶದಿಂದ AI, ಮಷೀನ್ ಲರ್ನಿಂಗ್ ಮತ್ತು ಕಂಪ್ಯೂಟರ್ ಶಿಕ್ಷಣಕ್ಕೆ ಆದ್ಯತೆ ನೀಡುವ ಉನ್ನತ ಶಿಕ್ಷಣ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ ಎಂದರು.

ಮಡಿಯಾಲದಲ್ಲಿ ಸ್ಥಾಪನೆಯಾಗಲಿರುವ AI ಮತ್ತು ಕಂಪ್ಯೂಟರ್ ಸೈನ್ಸ್ ಅಧ್ಯಯನ ಕೇಂದ್ರಗಳು ಭಾರತದ ಸನಾತನ ಜ್ಞಾನ ಪರಂಪರೆಯೊಂದಿಗೂ ಸಂಬಂಧ ಹೊಂದಿರಲಿವೆ ಎಂದು ಅವರು ಹೇಳಿದರು. ಆಧ್ಯಾತ್ಮವನ್ನು ಕಾರ್ಯಚಟುವಟಿಕೆಗಳ ಆಧಾರವಾಗಿಟ್ಟುಕೊಂಡಿರುವ ಸಂಸ್ಥೆಯೊಂದು ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಶಿಕ್ಷಣ ಕೇಂದ್ರ ಆರಂಭಿಸುತ್ತಿರುವುದು ಮಹತ್ವದ ಬೆಳವಣಿಗೆ ಎಂದರು.
AI ಸೇರಿದಂತೆ ಆಧುನಿಕ ತಂತ್ರಜ್ಞಾನಗಳು ಸನಾತನ ಧರ್ಮಕ್ಕೆ ವಿರುದ್ಧವಾದವುಗಳಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಪ್ರಾಚೀನ ಋಷಿಗಳು ಆಧ್ಯಾತ್ಮಿಕ ಸಾಧನೆಯ ಜೊತೆಗೆ ವಿಜ್ಞಾನದಲ್ಲೂ ಮಹತ್ವದ ಜ್ಞಾನ ಹೊಂದಿದ್ದರು. ಮಕ್ಕಳಿಗೆ ಉಚಿತ ಶಿಕ್ಷಣ ಸಿಗುತ್ತಿದೆ ಎಂಬ ಕಾರಣಕ್ಕೆ ಅವರು ಆಧುನಿಕ ತಂತ್ರಜ್ಞಾನ ಮತ್ತು ಹೊಸ ವಿಚಾರಗಳಿಂದ ವಂಚಿತರಾಗಬಾರದು ಎಂದರು.
ಮಂಗಳೂರಿಗೆ ಬರಲು ತಡವಾದ ಬಗ್ಗೆ ಮಾತನಾಡಿದ ಅವರು, ಮಂಗಳೂರಿಗೆ ತಾನು ಏನು ಕೊಡುಗೆ ನೀಡಬಹುದು ಎಂಬ ಬಗ್ಗೆ ಯೋಚಿಸುತ್ತಿದ್ದೆ. ಇದೀಗ ಮಡಿಯಾಲ ನಾರಾಯಣ ಭಟ್ಟರ ಸ್ಮರಣಾರ್ಥ ಉನ್ನತ ಶಿಕ್ಷಣ ಕೇಂದ್ರ ಆರಂಭಿಸುವ ಮೂಲಕ ಮಂಗಳೂರಿಗೆ ಕೊಡುಗೆ ನೀಡುವ ಅವಕಾಶ ದೊರೆತಿದೆ ಎಂದು ಹೇಳಿದರು.

CSR ನಿಧಿಗಳ ಸಮರ್ಪಕ ಬಳಕೆಯ ಅಗತ್ಯವನ್ನೂ ಅವರು ಪ್ರಸ್ತಾಪಿಸಿದರು. ಸರ್ಕಾರಕ್ಕೆ ತೆರಿಗೆಯ ಮೇಲೆ ಮತ್ತು ಕಾರ್ಪೊರೇಟ್ ಸಂಸ್ಥೆಗಳಿಗೆ ಲಾಭದ ಮೇಲೆ ಹಕ್ಕಿರುವಂತೆ, ಸಮಾಜ ಸೇವಾ ಚಟುವಟಿಕೆಗಳನ್ನು ನಡೆಸುವ ಸಂಸ್ಥೆಗಳಿಗೂ CSR ನಿಧಿಯ ಮೇಲೆ ಹಕ್ಕು ಇರಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ. ಮೋಹನ್ ಆಳ್ವ, ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಭಟ್, ಕ್ಯಾಂಪ್ಕೋ ಅಧ್ಯಕ್ಷ ಸತೀಶ್ ಚಂದ್ರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ವೈದಿಕ ಅಧ್ಯಯನ ವಿಭಾಗದ ವಿದ್ಯಾರ್ಥಿನಿಯರ ವೇದಘೋಷದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಎಂಬಿಬಿಎಸ್ ವಿದ್ಯಾರ್ಥಿನಿ ಗೌತಮಿ ಪೈ ತಮ್ಮ ಅನುಭವ ಹಂಚಿಕೊಂಡರು. ಪ್ರಶಾಂತಿ ಬಾಲಮಂದಿರ ಟ್ರಸ್ಟ್ ಅಧ್ಯಕ್ಷ ಡಾ. ಬಿ.ಎನ್. ನರಸಿಂಹಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಂತಗೌಡ ಬಿರಾದಾರ್ ಕಾರ್ಯಕ್ರಮ ನಿರೂಪಿಸಿದರು.
ಮಂಗಳೂರಿನಲ್ಲಿ ಶೀಘ್ರ ಉಚಿತ ಆಸ್ಪತ್ರೆ
ಮಂಗಳೂರು ನಗರದಲ್ಲಿ ಶೀಘ್ರದಲ್ಲೇ 50 ಹಾಸಿಗೆಗಳ ಸಾಮರ್ಥ್ಯದ ಉಚಿತ ಆಸ್ಪತ್ರೆ ಆರಂಭಿಸಲಾಗುವುದು ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಘೋಷಿಸಿದ್ದಾರೆ. ಇದೇ ಮಾದರಿಯಲ್ಲಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿಯೂ ಆಸ್ಪತ್ರೆಗಳನ್ನು ಆರಂಭಿಸುವ ಉದ್ದೇಶವಿದೆ. ಆಸ್ಪತ್ರೆಯ ರೂಪುರೇಷೆ ಸಿದ್ಧವಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ವಿವರಗಳನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪ್ರಸ್ತುತ ಕರ್ನಾಟಕದ 15 ಜಿಲ್ಲೆಗಳಲ್ಲಿ ಸಂಸ್ಥೆಯ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಶಿಕ್ಷಣ ಸಂಸ್ಥೆಗಳನ್ನು ವಿಸ್ತರಿಸುವ ಉದ್ದೇಶವಿದೆ ಎಂದು ಅವರು ಹೇಳಿದರು.
‘ಸಾಯಿಶ್ಯೂರ್’ ಯೋಜನೆಯ ಮೂಲಕ ಪ್ರಸ್ತುತ ಒಂದು ಕೋಟಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ದೇಶದ ಎಲ್ಲ ರಾಜ್ಯಗಳ ಐದು ಕೋಟಿ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುವ ಗುರಿಯನ್ನು ಹೊಂದಲಾಗಿದೆ ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ತಿಳಿಸಿದರು.









