ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆ ನ್ಯಾಯಾಲಯದ ಆವರಣದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಿ, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಹಾಯದಿಂದ ಸಮಗ್ರ ಶೋಧ ಕಾರ್ಯಾಚರಣೆ ನಡೆಸಲಾಯಿತು. ಪರಿಶೀಲನೆಯ ಬಳಿಕ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗದ ಕಾರಣ ಇದೊಂದು ಹುಸಿ ಬೆದರಿಕೆ ಎಂಬುದು ಪೊಲೀಸರ ತನಿಖೆಯಲ್ಲಿ ದೃಢಪಟ್ಟಿದೆ.
ಪೊಲೀಸರ ಮಾಹಿತಿ ಪ್ರಕಾರ, ಜೂನ್ 26ರಂದು ರಾತ್ರಿ 8.53ಕ್ಕೆ ಜಿಲ್ಲಾ ನ್ಯಾಯಾಲಯದ ಅಧಿಕೃತ ಇಮೇಲ್ ವಿಳಾಸಕ್ಕೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಆದರೆ ನ್ಯಾಯಾಲಯದ ಸಿಬ್ಬಂದಿ ಜೂನ್ 27ರಂದು ಬೆಳಿಗ್ಗೆ ಇಮೇಲ್ ಪರಿಶೀಲಿಸಿದ ವೇಳೆ ಈ ಸಂದೇಶ ಬೆಳಕಿಗೆ ಬಂದಿದ್ದು, ಕೂಡಲೇ ಉಡುಪಿ ನಗರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದೊಂದಿಗೆ ನ್ಯಾಯಾಲಯದ ಎಲ್ಲಾ ಕೊಠಡಿಗಳು, ಆಡಳಿತ ಕಚೇರಿಗಳು, ಶೌಚಾಲಯಗಳು ಹಾಗೂ ನ್ಯಾಯಾಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೂಕ್ಷ್ಮ ತಪಾಸಣೆ ನಡೆಸಿದರು. ಹಲವು ಗಂಟೆಗಳ ಕಾಲ ನಡೆದ ಶೋಧ ಕಾರ್ಯಾಚರಣೆಯಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ.
ಭದ್ರತಾ ತಪಾಸಣೆ ನಡೆಯುತ್ತಿದ್ದರೂ ನ್ಯಾಯಾಲಯದ ಕಲಾಪಗಳಿಗೆ ಯಾವುದೇ ಅಡಚಣೆ ಉಂಟಾಗದೆ ಎಂದಿನಂತೆ ಕಾರ್ಯನಿರ್ವಹಣೆ ಮುಂದುವರಿದಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬೆದರಿಕೆ ಇಮೇಲ್ ಕಳುಹಿಸಿದವರ ಪತ್ತೆಗೆ ಸೈಬರ್ ತನಿಖೆ ಆರಂಭಿಸಿದ್ದಾರೆ.
ಗಮನಾರ್ಹ ಸಂಗತಿಯೆಂದರೆ, ಇದೇ ನ್ಯಾಯಾಲಯಕ್ಕೆ ಜೂನ್ 21ರಂದು ಸಹ ಇದೇ ರೀತಿಯ ಬಾಂಬ್ ಬೆದರಿಕೆ ಇಮೇಲ್ ಬಂದಿತ್ತು. ಆಗಲೂ ನಡೆಸಿದ ತಪಾಸಣೆಯಲ್ಲಿ ಅದು ಹುಸಿ ಸಂದೇಶವೆಂದು ದೃಢಪಟ್ಟಿತ್ತು. ಪದೇ ಪದೇ ನ್ಯಾಯಾಲಯವನ್ನು ಗುರಿಯಾಗಿಸಿಕೊಂಡು ಇಂತಹ ಬೆದರಿಕೆ ಸಂದೇಶಗಳು ಬರುತ್ತಿರುವುದಕ್ಕೆ ವಕೀಲರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ತಪ್ಪಿತಸ್ಥರನ್ನು ಶೀಘ್ರ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.








