ಕಿನ್ನಿಗೋಳಿ: ಕಳೆದ 18 ವರ್ಷಗಳಿಂದ ಬೇಕರಿಯಲ್ಲಿ ಕಾರ್ಮಿಕನಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುಃಖದ ಘಟನೆ ಸೋಮವಾರ ಬೆಳಕಿಗೆ ಬಂದಿದೆ.
ಬಂಟ್ವಾಳ ತಾಲ್ಲೂಕಿನ ಪುಂಜಾಲಕಟ್ಟೆ ಮೂಲದ ರಮೇಶ್ ಪೂಜಾರಿ (40) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಅವರು ಕಿನ್ನಿಗೋಳಿಯ ಬೇಕರಿಗೆ ಸೇರಿದ ಕೊಠಡಿಯಲ್ಲಿ ವಾಸವಾಗಿದ್ದು, ದೀರ್ಘಕಾಲದಿಂದ ಅದೇ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಸೋಮವಾರ ಬೆಳಗ್ಗೆ ರಮೇಶ್ ಅವರು ಎಂದಿನಂತೆ ಕೆಲಸಕ್ಕೆ ಹಾಜರಾಗದಿರುವುದು ಗಮನಕ್ಕೆ ಬಂದಿದ್ದು, ಸಹೋದ್ಯೋಗಿಗಳು ಹಾಗೂ ಸಿಬ್ಬಂದಿ ಅವರ ಕೊಠಡಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಬೇಕರಿ ಆವರಣದ ಬಾವಿಯ ಬಳಿ ಅವರ ಚಪ್ಪಲಿಗಳು ಪತ್ತೆಯಾಗಿವೆ. ಅನುಮಾನಗೊಂಡು ಬಾವಿಯೊಳಗೆ ಪರಿಶೀಲಿಸಿದಾಗ ಮೃತದೇಹ ತೇಲುತ್ತಿರುವುದು ಕಂಡುಬಂದಿದೆ.
ತಕ್ಷಣ ಸ್ಥಳೀಯರು ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಬಾವಿಯಿಂದ ಹೊರತೆಗೆದಿದ್ದಾರೆ. ದೀರ್ಘಕಾಲದಿಂದ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಆರಂಭಿಸಿದ್ದಾರೆ.








