ಮಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಅಭಿಯಾನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಅಧಿಕೃತ ಚಾಲನೆ ದೊರೆಯಿತು. ಇದರ ಅಂಗವಾಗಿ ಜಿಲ್ಲೆಯಾದ್ಯಂತ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮನೆ ಮನೆಗೆ ತೆರಳಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ಆರಂಭಿಸಿದರು.
ಜಿಲ್ಲೆಯ 1,876 ಮತಗಟ್ಟೆಗಳಲ್ಲಿ ನಿಯೋಜಿತವಾಗಿರುವ ಬಿಎಲ್ಒಗಳು ಪ್ರತಿಯೊಬ್ಬ ಮತದಾರರ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮ್ಗಳನ್ನು ಹಸ್ತಾಂತರಿಸುತ್ತಿದ್ದಾರೆ. ಮತದಾರರ ವಿವರಗಳನ್ನು ಪರಿಷ್ಕರಿಸುವ ಉದ್ದೇಶದಿಂದ ಈ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದ್ದು, ಮುಂದಿನ ಹಂತದಲ್ಲಿ ಭರ್ತಿ ಮಾಡಿದ ನಮೂನೆಗಳನ್ನು ಅಧಿಕಾರಿಗಳು ಸಂಗ್ರಹಿಸಲಿದ್ದಾರೆ.
ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಮಂಗಳೂರು ನಗರದ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾರರಿಗೆ ಸ್ವತಃ ಗಣತಿ ನಮೂನೆಗಳನ್ನು ವಿತರಿಸಿದರು. ಅಲ್ಲದೆ, ಎಸ್ಐಆರ್ ಪ್ರಕ್ರಿಯೆಯ ಪ್ರಗತಿಯನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಕೆ. ಉಪಸ್ಥಿತರಿದ್ದರು.
ಜಿಲ್ಲೆಯ ಹಲವು ಭಾಗಗಳಲ್ಲಿ ಹಿರಿಯ ಅಧಿಕಾರಿಗಳೂ ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸಿದರು. ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗಡೆ ಹಾಗೂ ಮಾಜಿ ಕೇಂದ್ರ ಸಚಿವ ಬಿ. ಜನಾರ್ಧನ ಪೂಜಾರಿ ಅವರ ನಿವಾಸಗಳಿಗೂ ಅಧಿಕಾರಿಗಳು ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಿದರು. ಹಿರಿಯ ನಾಗರಿಕರಿಗೆ ವಿಶೇಷ ಆದ್ಯತೆ ನೀಡಿ ಅವರ ಮನೆಗಳಲ್ಲಿಯೇ ಅರ್ಜಿಗಳನ್ನು ತಲುಪಿಸಲಾಯಿತು.
ಮತದಾರರಿಗೆ ಎರಡು ಪ್ರತಿಗಳಲ್ಲಿ ಗಣತಿ ನಮೂನೆ ನೀಡಲಾಗುತ್ತಿದೆ. ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ಬಳಿಕ ಒಂದು ಪ್ರತಿಯನ್ನು ತಮ್ಮ ಬಳಿಯೇ ಇಟ್ಟುಕೊಂಡು, ಇನ್ನೊಂದು ಪ್ರತಿಯನ್ನು ಬಿಎಲ್ಒಗಳಿಗೆ ಹಿಂತಿರುಗಿಸಬೇಕು. ಅರ್ಜಿ ಭರ್ತಿ ಮಾಡಲು ಹಾಗೂ 2002ರ ಮತದಾರರ ಪಟ್ಟಿಯ ವಿವರಗಳನ್ನು ಪರಿಶೀಲಿಸಲು ನೆರವಾಗುವ ಉದ್ದೇಶದಿಂದ ಪ್ರತಿಯೊಂದು ಮತಗಟ್ಟೆಯಲ್ಲೂ ಮತದಾರರ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 18,05,189 ನೋಂದಾಯಿತ ಮತದಾರರಿದ್ದಾರೆ.
ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯುವಂತೆ ಮಾಡಲು ಮಾನ್ಯತೆ ಪಡೆದ ಎಲ್ಲ ರಾಜಕೀಯ ಪಕ್ಷಗಳು ಪ್ರತಿಯೊಂದು ಮತಗಟ್ಟೆಗೆ ಬೂತ್ ಮಟ್ಟದ ಏಜೆಂಟ್ಗಳನ್ನು ನೇಮಕ ಮಾಡುವಂತೆ ಜಿಲ್ಲಾಡಳಿತ ಸೂಚಿಸಿದೆ. ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹರು ಪಟ್ಟಿಗೆ ಸೇರ್ಪಡೆಯಾಗದಂತೆ ನೋಡಿಕೊಳ್ಳುವುದೇ ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.
ಮನೆ ಮನೆಗೆ ಭೇಟಿ ನೀಡುವ ಬಿಎಲ್ಒಗಳಿಗೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಈಗಿನ ಮತದಾರರ ಪಟ್ಟಿಯಲ್ಲಿರುವ ಹೆಸರು, ಮತಗಟ್ಟೆ ಸಂಖ್ಯೆ ಹಾಗೂ ವಿಧಾನಸಭಾ ಕ್ಷೇತ್ರದ ವಿವರಗಳು ಅರ್ಜಿಯಲ್ಲಿ ಈಗಾಗಲೇ ಮುದ್ರಿತವಾಗಿದ್ದು, ಹಳೆಯ ಫೋಟೋ ಇದ್ದಲ್ಲಿ ಹೊಸ ಭಾವಚಿತ್ರವನ್ನು ಅರ್ಜಿಯೊಂದಿಗೆ ಸಲ್ಲಿಸುವ ಅವಕಾಶವೂ ಇದೆ.
ಮನೆ ಮನೆಗೆ ಭೇಟಿ ನೀಡುವ ಕಾರ್ಯ ಜುಲೈ 29ರವರೆಗೆ ನಡೆಯಲಿದೆ. ಬಳಿಕ ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಕರಡು ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಅಥವಾ ತಿದ್ದುಪಡಿ ಅರ್ಜಿಗಳನ್ನು ಆಗಸ್ಟ್ 5ರಿಂದ ಸೆಪ್ಟೆಂಬರ್ 4ರವರೆಗೆ ಸಲ್ಲಿಸಬಹುದಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 7ರಂದು ಪ್ರಕಟಿಸಲಾಗುತ್ತದೆ.
ಇದೇ ವೇಳೆ, ಗಣತಿ ನಮೂನೆ ವಿತರಿಸಲಾದ ಮನೆಗಳಿಗೆ ನೇರಳೆ ಬಣ್ಣದ ಸ್ಟಿಕ್ಕರ್ ಅಂಟಿಸಲಾಗುತ್ತಿದ್ದು, ಭೇಟಿ ವೇಳೆ ಮನೆ ಬೀಗ ಹಾಕಿರುವುದಾದರೆ ಕೆಂಪು ಬಣ್ಣದ ಸ್ಟಿಕ್ಕರ್ ಅಂಟಿಸುವ ವ್ಯವಸ್ಥೆಯನ್ನು ಅಧಿಕಾರಿಗಳು ಅನುಸರಿಸುತ್ತಿದ್ದಾರೆ.








