ಮಂಗಳೂರು: ಭಾರೀ ಮಳೆಯಿಂದ ಮಂಗಳೂರಿನ ನಾಗುರಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಭೂಕುಸಿತ ದುರಂತಕ್ಕೆ ಮನೆಯ ಹಿಂಭಾಗದಲ್ಲಿದ್ದ ಕಾಂಪೌಂಡ್ ಗೋಡೆ ಕುಸಿತವೇ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.
ನಾಗುರಿಯಲ್ಲಿ ರಾತ್ರಿ ಸುರಿದ ಭಾರೀ ಮಳೆಯಿಂದ ಮಣ್ಣು ಕುಸಿದು ಮನೆಯ ಮೇಲೆ ಬಿದ್ದ ಪರಿಣಾಮ ದುರಂತ ಸಂಭವಿಸಿತ್ತು. ಮನೆಯ ಹಿಂಭಾಗದಲ್ಲಿದ್ದ ಕಾಂಪೌಂಡ್ ಗೋಡೆ ಕುಸಿದು ಮನೆಗೆ ಬಿದ್ದಿದ್ದು, ಈ ಅವಘಡದಲ್ಲಿ ಮೂವರು ಮೃತಪಟ್ಟಿದ್ದಾರೆ.

ಮೃತರನ್ನು
1) ಅನಾಮಿಕ ಚೌರಾಸಿಯ (8 ವರ್ಷ)
2) ಪರಿ (4 ವರ್ಷ)
3) ಶಾಂತ (46 ವರ್ಷ)
ಎಂದು ಗುರುತಿಸಲಾಗಿದೆ.
ಇನ್ನು ಮಣ್ಣಿನಡಿ ಸಿಲುಕಿದ್ದ ಮೂವರನ್ನು ರಕ್ಷಣಾ ಕಾರ್ಯಾಚರಣೆ ಮೂಲಕ ಸುರಕ್ಷಿತವಾಗಿ ಹೊರತೆಗೆಯಲಾಗಿದೆ.
ಬದುಕುಳಿದವರನ್ನು
1) ಅಲ್ಕಾ (14 ವರ್ಷ)
2) ಅನುಷಾ (11 ವರ್ಷ)
3) ಬಾಲಕೃಷ್ಣ (48 ವರ್ಷ)
ಎಂದು ಗುರುತಿಸಲಾಗಿದೆ.
ಮೃತರು ಹಾಗೂ ರಕ್ಷಿಸಲ್ಪಟ್ಟವರು ಮೂಲತಃ ಬಿಹಾರ ರಾಜ್ಯದವರಾಗಿದ್ದು, ಕಳೆದ ಸುಮಾರು 20 ವರ್ಷಗಳಿಂದ ಮಂಗಳೂರು ಕಂಕನಾಡಿ ಗ್ರಾಮದ ಕಂಕನಾಡಿ ಪೊಲೀಸ್ ಠಾಣೆಯ ಹಿಂಭಾಗದ ಪ್ರದೇಶದಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.

ಘಟನೆ ಬಳಿಕ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಂಪೌಂಡ್ ಗೋಡೆಯ ಕಾಮಗಾರಿ ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಮಳೆಗಾಲದ ನೀರಿನ ಒತ್ತಡದಿಂದ ಗೋಡೆ ದುರ್ಬಲಗೊಂಡು ಕುಸಿದಿರಬಹುದೇ ಅಥವಾ ನಿರ್ಮಾಣದಲ್ಲಿ ದೋಷವಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಘಟನೆ ಬಳಿಕ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಂಪೌಂಡ್ ಗೋಡೆಯ ಕಾಮಗಾರಿ ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಮಳೆಗಾಲದ ನೀರಿನ ಒತ್ತಡದಿಂದ ಗೋಡೆ ದುರ್ಬಲಗೊಂಡು ಕುಸಿದಿರಬಹುದೇ ಅಥವಾ ನಿರ್ಮಾಣದಲ್ಲಿ ದೋಷವಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಈ ಕುರಿತು ಮಾತನಾಡಿದ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, “ಕಾಂಪೌಂಡ್ ಗೋಡೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ನಡೆದಿರುವುದು ತನಿಖೆಯಲ್ಲಿ ದೃಢಪಟ್ಟರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅನಧಿಕೃತವಾಗಿ ಗುಡ್ಡ ಅಗೆದಿರುವುದು ಕಂಡುಬಂದರೂ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಪ್ರಕರಣದ ತನಿಖೆಗೆ ತಾಂತ್ರಿಕ ತಜ್ಞರ ಅಭಿಪ್ರಾಯ ಪಡೆಯಲಾಗುತ್ತಿದ್ದು, ವೈಜ್ಞಾನಿಕ ಕಾರಣಗಳನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ. ತಾಂತ್ರಿಕ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ನಾಗುರಿ ದುರಂತದಿಂದಾಗಿ ಮಳೆಗಾಲದಲ್ಲಿ ಸುರಕ್ಷತಾ ಕ್ರಮಗಳ ನಿರ್ಲಕ್ಷ್ಯ ಹಾಗೂ ನಿರ್ಮಾಣ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಮತ್ತೆ ಪ್ರಶ್ನೆಗಳು ಎದ್ದಿವೆ.
ಈ ಭೀಕರ ದುರಂತಕ್ಕೆ ತೀವ್ರ ಸಂತಾಪ ಸೂಚಿಸಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅವರು, ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ರೂಪಾಯಿಗಳ ತುರ್ತು ಪರಿಹಾರವನ್ನು ಘೋಷಿಸಿದ್ದಾರೆ. ಇನ್ನು ಘಟನೆಯಲ್ಲಿ ಗಾಯಗೊಂಡವರಿಗೆ ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದ್ದು, ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಜಿಲ್ಲಾಡಳಿತವೇ ಭರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.








