ಉಳ್ಳಾಲ: ಸೋಮೇಶ್ವರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಉತ್ಸವ ಸಮಿತಿಯ ಆಶ್ರಯದಲ್ಲಿ ಸೆಪ್ಟೆಂಬರ್ 4ರಂದು ನಡೆಯಲಿರುವ ನಾಲ್ಕನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಉತ್ಸವ, ಮುದ್ದುಕೃಷ್ಣ ವೇಷ ಸ್ಪರ್ಧೆ ಹಾಗೂ ವಿವಿಧ ಮನೋರಂಜನಾ ಸ್ಪರ್ಧೆಗಳ ಆಮಂತ್ರಣ ಪತ್ರಿಕೆಯನ್ನು ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ವಠಾರದಲ್ಲಿ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸೋಮೇಶ್ವರದಲ್ಲಿ ಶ್ರೀಕೃಷ್ಣ ಆರಾಧನೆ ನಿರಂತರವಾಗಿ ನಡೆಯುತ್ತಿರುವುದು ಸಂತಸದ ವಿಷಯವಾಗಿದ್ದು, ಈ ಉತ್ಸವವು ಭಕ್ತಿಭಾವ, ಶಿಸ್ತು ಹಾಗೂ ಸಮಾಜದ ಸೌಹಾರ್ದತೆಯನ್ನು ಮತ್ತಷ್ಟು ಬಲಪಡಿಸಲಿ ಎಂದು ಆಶಿಸಿದರು. ಧಾರ್ಮಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸುವುದು ಸಂಘಟನೆಯ ಶಕ್ತಿ, ಸಮರ್ಪಣೆ ಮತ್ತು ಶಿಸ್ತಿನಿಂದ ಮಾತ್ರ ಸಾಧ್ಯ ಎಂದು ಅವರು ಹೇಳಿದರು.
ಮೂಡಬಿದ್ರೆ ತಹಶೀಲ್ದಾರ್ ಗುರುಪ್ರಸಾದ್ ಮಾತನಾಡಿ, ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವಗಳ ಉದ್ದೇಶ ಕೇವಲ ಆಚರಣೆಗೆ ಸೀಮಿತವಾಗದೆ ಸಮಾಜದಲ್ಲಿ ಒಗ್ಗಟ್ಟು, ಸಹಕಾರ ಮತ್ತು ಸೇವಾ ಮನೋಭಾವವನ್ನು ಬೆಳೆಸುವುದಾಗಿದೆ ಎಂದರು. ಇಂತಹ ಕಾರ್ಯಕ್ರಮಗಳು ಸಮಾಜದ ಎಲ್ಲ ವರ್ಗದ ಜನರನ್ನು ಒಂದೇ ವೇದಿಕೆಗೆ ಕರೆತಂದು ಸಾಂಸ್ಕೃತಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಉತ್ಸವ ಸಮಿತಿಯ ಗೌರವ ಸಲಹೆಗಾರ ವಾಸುಗೋಪಾಲ್ ಮಾತನಾಡಿ, ನಾಲ್ಕು ವರ್ಷಗಳ ಯಶಸ್ವಿ ಪಯಣದ ಬಳಿಕವೂ ಪ್ರತಿವರ್ಷ ಹೊಸತನದೊಂದಿಗೆ ಉತ್ಸವವನ್ನು ರೂಪಿಸಲಾಗುತ್ತಿದೆ ಎಂದರು. ಆರಂಭದಿಂದ ಹಲವು ಸವಾಲುಗಳು ಎದುರಾದರೂ ಸಮಿತಿ ಸದಸ್ಯರು, ಭಕ್ತರು ಹಾಗೂ ಸಾರ್ವಜನಿಕರ ಸಹಕಾರದಿಂದ ಅವುಗಳನ್ನು ಯಶಸ್ವಿಯಾಗಿ ಎದುರಿಸಿ ಉತ್ಸವವನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗಿದೆ ಎಂದು ಹೇಳಿದರು. ಮುಂದಿನ ವರ್ಷಗಳಲ್ಲಿ ಇನ್ನಷ್ಟು ವಿಜೃಂಭಣೆಯಿಂದ ಹಾಗೂ ಆದರ್ಶಪ್ರಾಯವಾಗಿ ಉತ್ಸವವನ್ನು ಆಯೋಜಿಸುವ ಸಂಕಲ್ಪವಿದೆ ಎಂದರು.
ಆಮಂತ್ರಣ ಪತ್ರಿಕೆ ಬಿಡುಗಡೆಗೂ ಮುನ್ನ ಶ್ರೀ ಕ್ಷೇತ್ರ ಸೋಮೇಶ್ವರದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಉತ್ಸವದ ಎಲ್ಲ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಲೆಂದು ಪ್ರಾರ್ಥಿಸಲಾಯಿತು.
ಕಾರ್ಯಕ್ರಮದಲ್ಲಿ ಉತ್ಸವ ಸಮಿತಿಯ ಗೌರವ ಸಲಹೆಗಾರರಾದ ಶರತ್ ಚಂದ್ರ ಗಟ್ಟಿ, ದಿನೇಶ್ ಕಾಜವ, ರಾಜಗೋಪಾಲ್, ಬೆಂಗಳೂರಿನ ವೈದ್ಯ ಡಾ. ಸಂತೋಷ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಉತ್ಸವ ಸಮಿತಿಯ ಅಧ್ಯಕ್ಷ ರಾಘವ ಉಚ್ಚಿಲ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪ್ರವೀಣ್ ಸೋಮೇಶ್ವರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.








