ಮಂಗಳೂರು : ಡ್ರಗ್ಸ್ ಮುಕ್ತ ಮಂಗಳೂರು ಅಭಿಯಾನಕ್ಕೆ ಕರಾವಳಿ ಪೊಲೀಸರು ಭಾರಿ ಯಶಸ್ಸು ತಂದಿದ್ದಾರೆ. ನೆರೆಯ ಕೇರಳ ರಾಜ್ಯ, ಸಿಲಿಕಾನ್ ಸಿಟಿ ಬೆಂಗಳೂರು ಹಾಗೂ ಮಂಗಳೂರಿಗೆ ಬೃಹತ್ ಪ್ರಮಾಣದಲ್ಲಿ ಎಂಡಿಎಂಎ ಮಾದಕ ದ್ರವ್ಯ ಪೂರೈಕೆಗೆ ಸಿದ್ಧತೆ ನಡೆಸಿದ್ದ ಅಂತರರಾಜ್ಯ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದದ ಲಾಡ್ಜ್ ಒಂದರ ಮೇಲೆ ಮಿಂಚಿನ ದಾಳಿ ನಡೆಸಿ ಬರೋಬ್ಬರಿ 5.196 ಕೆಜಿ ತೂಕದ ಎಂಡಿಎಂಎ ವಶಪಡಿಸಿಕೊಂಡಿದ್ದು, ಬೆಳ್ತಂಗಡಿ ಮೂಲದ ಇಬ್ಬರು ಕುಖ್ಯಾತ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ನಿವಾಸಿ ಮುಹಮ್ಮದ್ ಅಲ್ಫಾಝ್ (28) ಹಾಗೂ ಉಜಿರೆಯ ಹಳೆಪೇಟೆ ಲಾಯಿಲಾ ವಿವೇಕಾನಂದ ನಗರದ ಮುಹಮ್ಮದ್ ಮುಸ್ತಫಾ (28) ಎಂದು ಗುರುತಿಸಲಾಗಿದೆ. ವಶಪಡಿಸಿಕೊಳ್ಳಲಾದ ಮಾದಕ ವಸ್ತುವಿನ ಅಂತರರಾಷ್ಟ್ರೀಯ ಮಾರುಕಟ್ಟೆ ಮೌಲ್ಯ ಸುಮಾರು 5.20 ಕೋಟಿ ರೂಪಾಯಿಗಳಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕಳೆದ 15 ದಿನಗಳ ಹಿಂದೆ ಮಂಗಳೂರಿನಲ್ಲಿ 15 ಗ್ರಾಂ ಎಂಡಿಎಂಎ ಸಮೇತ ಅಣ್ಣಪ್ಪಸ್ವಾಮಿ ಎಂಬ ಸಣ್ಣ ಡ್ರಗ್ ಪೆಡ್ಲರ್ನನ್ನು ಪೊಲೀಸರು ಬಂಧಿಸಿದ್ದರು. ಈತನ ಬ್ಯಾಕ್ವರ್ಡ್ ಲಿಂಕ್ ಬೆನ್ನಟ್ಟಿದ ಸಿಸಿಬಿ ಇನ್ಸ್ಪೆಕ್ಟರ್ ನೇತೃತ್ವದ ವಿಶೇಷ ತಂಡಕ್ಕೆ ದೇಶದ ರಾಜಧಾನಿ ದೆಹಲಿಯಿಂದ ಕರ್ನಾಟಕಕ್ಕೆ ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್ ಸಾಗಾಟವಾಗುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಆರೋಪಿಗಳಾದ ಅಲ್ಫಾಝ್ ಮತ್ತು ಮುಸ್ತಫಾ ದೆಹಲಿಯಿಂದ ಡ್ರಗ್ಸ್ ಖರೀದಿಸಿಕೊಂಡು ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಸಾಗಿಸುತ್ತಿದ್ದರು.
ಆರೋಪಿಗಳು ಬಾಗಲಕೋಟೆ ಜಿಲ್ಲೆಯ ಹುನಗುಂದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಲಾಡ್ಜ್’ನಲ್ಲಿ ತಂಗಿರುವ ಬಗ್ಗೆ ಪಕ್ಕಾ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪಡೆ, ಧೀಡೀರ್ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದೆ. ದಾಳಿಯ ವೇಳೆ 5.196 ಕೆಜಿ ಎಂಡಿಎಂಎ ಕ್ರಿಸ್ಟಲ್ಸ್, ಮೊಬೈಲ್ ಫೋನ್ಗಳನ್ನು ಜಪ್ತಿ ಮಾಡಲಾಗಿದೆ. ಬಂಧಿತ ಅಲ್ಫಾಝ್ ಹಳೆ ರೌಡಿಶೀಟರ್ ಆಗಿದ್ದು, ಈತನ ವಿರುದ್ಧ ಈ ಹಿಂದೆ 2024 ರಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹಾಗೂ 2026 ರಲ್ಲಿ ಉರ್ವ ಪೊಲೀಸ್ ಠಾಣೆಯಲ್ಲೂ ಬೃಹತ್ ಪ್ರಮಾಣದ ಎಂಡಿಎಂಎ ಡ್ರಗ್ಸ್ ಮಾರಾಟದ ಕೇಸ್ಗಳು ದಾಖಲಾಗಿದ್ದವು. ಈ ಅಂತರರಾಜ್ಯ ಜಾಲದಲ್ಲಿ ಕೇರಳ ಹಾಗೂ ಮುಂಬೈನ ದೊಡ್ಡ ಡ್ರಗ್ ಡೀಲರ್ ಗಳು ಭಾಗಿಯಾಗಿರುವ ಶಂಕೆ ಇದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.








