ಮೈಸೂರು: ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಎರಡು ದಿನಗಳ ಕಾಲ ಕಂಬಳ ಪ್ರದರ್ಶನ ಆಯೋಜಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗುತ್ತಿದ್ದರೂ, ಸಿದ್ಧತೆಗಳು ಮಾತ್ರ ವೇಗ ಪಡೆದುಕೊಂಡಿವೆ. ಮೈಸೂರಿನ ಹೊರವಲಯದ ಸಾತಗಳ್ಳಿ ಸಮೀಪದ ಸುಮಾರು 20 ಎಕರೆ ಪ್ರದೇಶದಲ್ಲಿ ಕಂಬಳ ಆಯೋಜನೆಗೆ ಅಗತ್ಯ ಕಾಮಗಾರಿಗಳು ಭರದಿಂದ ನಡೆಯುತ್ತಿದ್ದು, ಪರಿಸರ ಹಾಗೂ ಸಾಂಸ್ಕೃತಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಹಲವು ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.
ಕಂಬಳಕ್ಕಾಗಿ ಗುರುತಿಸಲಾದ ಪ್ರದೇಶವು ದಟ್ಟ ಹಸಿರಿನಿಂದ ಕೂಡಿದ್ದು, ವಿವಿಧ ಜಾತಿಯ 150ಕ್ಕೂ ಹೆಚ್ಚು ಬೃಹತ್ ಮರಗಳು ಇಲ್ಲಿ ಬೆಳೆದಿವೆ. ಕಂಬಳ ಕರೆಯನ್ನು ನಿರ್ಮಿಸಲು ಈ ಮರಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ ಎನ್ನಲಾಗಿದ್ದು, ಇದರಿಂದ ಪರಿಸರ ಹಾನಿಯಾಗಲಿದೆ ಎಂದು ಪರಿಸರ ಹೋರಾಟಗಾರರು ಆರೋಪಿಸಿದ್ದಾರೆ.
ಇದೇ ಪ್ರದೇಶದಲ್ಲಿ ಸುಮಾರು ಆರು ಎಕರೆ ವಿಸ್ತೀರ್ಣ ಹೊಂದಿರುವ ದೊಡ್ಡ ಕೆರೆಯೂ ಇದ್ದು, ಮಳೆಗಾಲದಲ್ಲಿ ನೀರಿನಿಂದ ತುಂಬಿ ಅಪರೂಪದ ಪಕ್ಷಿಗಳ ಆಶ್ರಯ ತಾಣವಾಗಿರುವ ಈ ಕೆರೆಯ ಭಾಗವನ್ನು ಮಣ್ಣು ಹಾಕಿ ಸಮತಟ್ಟುಗೊಳಿಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದರೂ, ಹಲವು ಜೆಸಿಬಿ ಯಂತ್ರಗಳ ಮೂಲಕ ಕಾಮಗಾರಿ ಮುಂದುವರಿದಿದೆ ಎಂದು ಹೇಳಲಾಗುತ್ತಿದೆ.
ಸರ್ಕಾರದ ಕ್ರಮದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿಯೂ ವ್ಯಾಪಕ ಚರ್ಚೆ ನಡೆಯುತ್ತಿದೆ. ತುಳುನಾಡಿನ ಸಂಸ್ಕೃತಿ ಮತ್ತು ಕಂಬಳದ ಮೂಲ ಸ್ವರೂಪವನ್ನು ಕಾಪಾಡಬೇಕು ಎಂದು ಒತ್ತಾಯಿಸುತ್ತಿರುವ ಹಲವರು, ಕಂಬಳವನ್ನು ಅದರ ನೈಸರ್ಗಿಕ ಪರಿಸರದಿಂದ ಬೇರ್ಪಡಿಸಿ ಬೇರೆಡೆ ನಡೆಸುವುದು ಸೂಕ್ತವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೈಸೂರು ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೂಡ ಈ ಹಿಂದೆ ದಸರಾ ಉನ್ನತ ಮಟ್ಟದ ಸಭೆಯಲ್ಲಿ ಕಂಬಳವನ್ನು ದಸರಾ ಕಾರ್ಯಕ್ರಮಕ್ಕೆ ಸೇರಿಸುವ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ತುಳುನಾಡಿನ ಸಾಂಸ್ಕೃತಿಕ ಪರಂಪರೆಯಾದ ಕಂಬಳವನ್ನು ಕೇವಲ ಪ್ರದರ್ಶನ ಕಾರ್ಯಕ್ರಮವಾಗಿ ರೂಪಿಸುವುದು ಸಮಂಜಸವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದರು.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಕಂಬಳವು ತುಳುನಾಡಿನ ಭೌಗೋಳಿಕತೆ, ಸಂಸ್ಕೃತಿ ಮತ್ತು ದೈವಾರಾಧನೆಯೊಂದಿಗೆ ಬೆಸೆದುಕೊಂಡಿರುವ ವಿಶಿಷ್ಟ ಕ್ರೀಡೆಯಾಗಿದ್ದು, ಅದನ್ನು ಕೃತಕವಾಗಿ ಬೇರೆ ಪ್ರದೇಶಕ್ಕೆ ಸ್ಥಳಾಂತರಿಸುವುದು ಎರಡೂ ಭಾಗಗಳ ಸಾಂಸ್ಕೃತಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ, ರಾಜ್ಯದಲ್ಲಿ ಬರ ಪರಿಸ್ಥಿತಿ ಹಾಗೂ ಹಣಕಾಸಿನ ಒತ್ತಡ ಇರುವ ಸಂದರ್ಭದಲ್ಲಿ ಕೇವಲ ಎರಡು ದಿನಗಳ ಕಂಬಳ ಪ್ರದರ್ಶನಕ್ಕಾಗಿ ಸಾರ್ವಜನಿಕ ಹಣದ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿರುವುದನ್ನು ರೈತ ಸಂಘಟನೆಗಳು ಪ್ರಶ್ನಿಸಿವೆ. ಈ ಯೋಜನೆಗೆ ಮೀಸಲಿಡಲಾಗುತ್ತಿರುವ 8 ರಿಂದ 10 ಕೋಟಿ ರೂಪಾಯಿ ಸಾರ್ವಜನಿಕ ಹಿತದೃಷ್ಟಿಯಿಂದ ಬಳಸಬೇಕೆಂದು ಆಗ್ರಹಿಸಿವೆ.
ಪ್ರಾಣಿ ಕಲ್ಯಾಣ ಸಂಘಟನೆಗಳು ಕೂಡ ಆತಂಕ ವ್ಯಕ್ತಪಡಿಸಿದ್ದು, ಕರಾವಳಿಯ ಹವಾಮಾನಕ್ಕೆ ಹೊಂದಿಕೊಂಡಿರುವ ಕಂಬಳದ ಕೋಣಗಳನ್ನು ನೂರಾರು ಕಿಲೋಮೀಟರ್ ದೂರ ಮೈಸೂರಿಗೆ ಸಾಗಿಸುವುದರಿಂದ ಅವುಗಳ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಎಚ್ಚರಿಸಿವೆ.
ಈ ಹಿನ್ನೆಲೆಯಲ್ಲಿ ಮೈಸೂರಿನ ಪ್ರಗತಿಪರ ಚಿಂತಕರು, ಹೆರಿಟೇಜ್ ತಜ್ಞರು, ಪರಿಸರ ಹೋರಾಟಗಾರರು ಹಾಗೂ ರೈತ ಸಂಘಟನೆಗಳು ಒಟ್ಟಾಗಿ ಹೋರಾಟ ಸಮಿತಿಯನ್ನು ರಚಿಸಿದ್ದು, ಸರ್ಕಾರವು ಕಂಬಳ ಆಯೋಜನೆ ಕುರಿತ ನಿರ್ಧಾರವನ್ನು ಮರುಪರಿಶೀಲಿಸದಿದ್ದರೆ ಪ್ರತಿಭಟನೆ ತೀವ್ರಗೊಳಿಸುವುದರ ಜೊತೆಗೆ ನ್ಯಾಯಾಲಯದ ಮೊರೆ ಹೋಗುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮತ್ತೊಂದೆಡೆ, ಸರ್ಕಾರ ಮಾತ್ರ ತನ್ನ ನಿರ್ಧಾರದಿಂದ ಹಿಂದೆ ಸರಿಯದೇ ಸಿದ್ಧತೆಗಳನ್ನು ಮುಂದುವರಿಸಿದೆ.








