ಮಂಗಳೂರು : ರಾತ್ರಿ ಮನೆಯಲ್ಲಿ ಮಲಗಿದ್ದ ಸ್ವಂತ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೇ ಭೀಕರವಾಗಿ ಕೊಲೆ ಮಾಡಿರುವ ಕರುಣಾಜನಕ ಹಾಗೂ ಆಘಾತಕಾರಿ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಮಠದ ಬಳಿ ರವಿವಾರ ತಡರಾತ್ರಿ ನಡೆದಿದೆ.
ಕೊಲೆಯಾದ ದುರ್ದೈವಿಯನ್ನು ಮೂಲತಃ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತೆಗ್ಯಾಳು ಗ್ರಾಮದ ನಿವಾಸಿ, ಪ್ರಸ್ತುತ ಚೊಕ್ಕಬೆಟ್ಟು ಮಠದ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ. ಕೃತ್ಯ ಎಸಗಿದ ಆತನ ಸ್ವಂತ ಅಣ್ಣ ಸೋಮನಾಥ್ (21) ಎಂಬಾತನನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೊಪ್ಪಳ ಮೂಲದ ಈ ಕುಟುಂಬ ಚೊಕ್ಕಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿ ತಾಯಿಯೊಂದಿಗೆ ವಾಸವಾಗಿತ್ತು. ಇತ್ತೀಚೆಗೆ ತಾಯಿ ಕೊಪ್ಪಳದಲ್ಲಿರುವ ಸ್ವಗ್ರಾಮಕ್ಕೆ ತೆರಳಿದ್ದರಿಂದ ಮನೆಯಲ್ಲಿ ಇಬ್ಬರು ಸಹೋದರರು ಮಾತ್ರ ಇದ್ದರು. ರವಿವಾರ ತಡರಾತ್ರಿ ಇಬ್ಬರೂ ಊಟ ಮಾಡಿ ಮಲಗಿದ್ದರು. ಆದರೆ, ಸೋಮವಾರ ಬೆಳಿಗ್ಗೆ ನಿದ್ದೆಯಿಂದ ಎದ್ದ ಅಣ್ಣ ಸೋಮನಾಥ್, “ನನ್ನ ತಮ್ಮ ಮಲಗಿದ್ದಲ್ಲಿಂದ ಏಳುತ್ತಲೇ ಇಲ್ಲ” ಎಂದು ನೆರೆಮನೆಯವರ ಬಳಿ ಹೋಗಿ ನಾಟಕವಾಡಿದ್ದಾನೆ. ತಕ್ಷಣ ನೆರೆಮನೆಯವರು ಬಾಡಿಗೆ ಮನೆಯ ಮಾಲಕಿ ರೇಖಾ ಅವರಿಗೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಮಲ್ಲಿಕಾರ್ಜುನ ತಲೆಗೆ ಕಲ್ಲು ಎತ್ತಿಹಾಕಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಘಟನೆಯ ಸುಳಿವು ಸಿಗುತ್ತಿದ್ದಂತೆ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.ಪ್ರಾಥಮಿಕ ತನಿಖೆಯಲ್ಲಿ ಅಣ್ಣ ಸೋಮನಾಥನೇ ಈ ಕೃತ್ಯ ಎಸಗಿರುವುದು ಕಂಡುಬಂದಿದ್ದು, ಆತನನ್ನು ಬಂಧಿಸಿ ಕೊಲೆಗೆ ನಿಖರ ಕಾರಣವೇನು ಎಂಬುದರ ಕುರಿತು ವಿಚಾರಣೆ ನಡೆಸಲಾಗುತ್ತಿದೆ.








