ಕಾಸರಗೋಡು: ಉಪ್ಪಳದ ಕೊಂಡೆವೂರಿನ ನಿವಾಸಿ ಹಾಗೂ ಬಿಜೆಪಿ ಕಾರ್ಯಕರ್ತ ಸಂದೀಪ್ ಶೆಟ್ಟಿ ಅಲಿಯಾಸ್ ಅಣ್ಣು (44) ಅವರ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ.
ಕೆಲಸಕ್ಕೆ ತೆರಳಿದ್ದ ಸಂದೀಪ್ ಶೆಟ್ಟಿ ಅವರು ನಾಪತ್ತೆಯಾಗಿದ್ದ ಹಿನ್ನೆಲೆ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಅವರು ಉಪ್ಪಳದ ಶಾರದಾ ನಗರದಲ್ಲಿರುವ ಸೋಡಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.
ಸೋಮವಾರ ಬೆಳಗ್ಗೆ ಎಂದಿನಂತೆ ಸೋಡಾ ಕಾರ್ಖಾನೆಗೆ ಕೆಲಸಕ್ಕೆ ತೆರಳಿದ್ದ ಸಂದೀಪ್ ಶೆಟ್ಟಿ ಮನೆಗೆ ಮರಳಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹಾಗೂ ಸ್ಥಳೀಯರು ಹುಡುಕಾಟ ಆರಂಭಿಸಿದ್ದರು. ಈ ವೇಳೆ ಮನೆಯ ತೋಟದಲ್ಲಿರುವ ಕೆರೆಯ ಸಮೀಪ ಅವರ ಅಂಗಿ ಪತ್ತೆಯಾಗಿದ್ದು, ಅವರು ಕೆರೆಗೆ ಬಿದ್ದಿರಬಹುದೆಂಬ ಅನುಮಾನ ವ್ಯಕ್ತವಾಗಿತ್ತು.
ಮಾಹಿತಿ ತಿಳಿದ ಅಗ್ನಿಶಾಮಕ ಮತ್ತು ರಕ್ಷಣಾ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕೆರೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ವೇಳೆ ಸಂದೀಪ್ ಅವರ ಮೃತದೇಹವನ್ನು ಹೊರತೆಗೆದರು.
ಕೆರೆಯಲ್ಲಿ ಅಳವಡಿಸಿದ್ದ ಮೋಟಾರ್ ಪಂಪ್ನ ಫುಟ್ ವಾಲ್ವ್ ದುರಸ್ತಿ ಮಾಡಲು ಪ್ರಯತ್ನಿಸುವಾಗ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಸಂಬಂಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಘಟನೆಯ ನಿಖರ ಕಾರಣ ತಿಳಿಯಲು ಹೆಚ್ಚಿನ ತನಿಖೆ ಮುಂದುವರಿದಿದೆ.
ಸೋಡಾ ಕಾರ್ಖಾನೆಯ ಉದ್ಯೋಗದ ಜೊತೆಗೆ ಸಂದೀಪ್ ಶೆಟ್ಟಿ ಸ್ಥಳೀಯ ಸಾಮಾಜಿಕ ಹಾಗೂ ರಾಜಕೀಯ ವಲಯದಲ್ಲಿಯೂ ಸಕ್ರಿಯರಾಗಿದ್ದರು. ಅವರು ಬಿಜೆಪಿಯ 81ನೇ ಬೂತ್ನ ಸಕ್ರಿಯ ಕಾರ್ಯಕರ್ತರಾಗಿದ್ದು, ಪ್ರದೇಶದ ಹಲವು ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘಟನೆಗಳ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿದ್ದರು.
ಸಂದೀಪ್ ಅವರ ನಿಧನಕ್ಕೆ ಬಿಜೆಪಿ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅವರ ಸಕ್ರಿಯ ಸೇವೆಯನ್ನು ಅವರು ಸ್ಮರಿಸಿದ್ದಾರೆ.








