ಪುಂಜಾಲಕಟ್ಟೆ: ಮನೆಯಲ್ಲಿ ಒಬ್ಬಂಟಿಯಾಗಿದ್ದ 82 ವರ್ಷದ ಅಜ್ಜಿಯ ಕೈಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದೊಯ್ದಿದ್ದ ಪ್ರಕರಣವನ್ನು ಪುಂಜಾಲಕಟ್ಟೆ ಪೊಲೀಸರು ಭೇದಿಸಿದ್ದು, ಅಜ್ಜಿಯ ಸ್ವಂತ ಮೊಮ್ಮಗನನ್ನೇ ಬಂಧಿಸಿದ್ದಾರೆ. ಬಂಟ್ವಾಳ ತೆಂಕಕಜೆಕಾರು ನಿವಾಸಿ ಶಬೀರ್ (33) ಬಂಧಿತ ಆರೋಪಿ. ಈತನಿಂದ ₹5 ಲಕ್ಷ ಮೌಲ್ಯದ 40 ಗ್ರಾಂ ತೂಕದ ಎರಡು ಚಿನ್ನದ ಬಳೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ತೆಂಕಕಜೆಕಾರು ಉದ್ದದ ಗುಡ್ಡೆ ನಿವಾಸಿ ಸಾದಿಕ್ ಎಂಬುವವರ ತಾಯಿ ಅವ್ವಮ್ಮ (82) ಅವರು ಆಗಸ್ಟ್ 14 ರಂದು ಮನೆಯಲ್ಲಿ ಒಬ್ಬಂಟಿಯಾಗಿದ್ದರು. ಈ ವೇಳೆ ಮುಖಕ್ಕೆ ಬಟ್ಟೆ ಧರಿಸಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಅಜ್ಜಿಯ ಎರಡೂ ಕೈಗಳಲ್ಲಿದ್ದ ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿದ್ದ. ಈ ವೇಳೆ ಅಜ್ಜಿಯ ಕೈಗೆ ರಕ್ತಗಾಯವಾಗಿತ್ತು. ಈ ಕುರಿತು ಸಾದಿಕ್ ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ BNS ಕಾಯ್ದೆಯಡಿ ಪ್ರಕರಣ (ಅ.ಕ್ರ: 70/2026) ದಾಖಲಾಗಿತ್ತು.
ಪ್ರಕರಣದ ತನಿಖೆಗೆ ಇಳಿದ ಪೊಲೀಸರಿಗೆ ಶಾಕಿಂಗ್ ಸುದ್ದಿ ಸಿಕ್ಕಿತ್ತು ಅಜ್ಜಿಯ ಸ್ವಂತ ಮೊಮ್ಮಗ ಶಬೀರ್ ಈ ಕೃತ್ಯ ಎಸಗಿರುವುದು ಕಂಡುಬಂದಿದೆ. ಆಗಸ್ಟ್ 16 ರಂದು ಆರೋಪಿಯನ್ನು ಬಂಧಿಸಿದ ಪೊಲೀಸರು, ಆತನಿಂದ ಚಿನ್ನದ ಬಳೆಗಳನ್ನು ಜಪ್ತಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.








