ಮಂಗಳೂರು: ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ನಟ ಯಶ್ ಮಂಗಳೂರಿಗೆ ಆಗಮಿಸಿದ್ದಾರೆ. ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಯಶ್ ಅವರಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತ ನೀಡಿದ್ದಾರೆ.
ಚಿತ್ರ ಬಿಡುಗಡೆಗೂ ಮುನ್ನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಉದ್ದೇಶದಿಂದ ಯಶ್ ಮಂಗಳೂರಿಗೆ ಬಂದಿದ್ದಾರೆ ಎನ್ನಲಾಗಿದೆ. ನಾಳೆ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯಾಗಲಿರುವ ಹಿನ್ನೆಲೆಯಲ್ಲಿ, ಧರ್ಮಸ್ಥಳಕ್ಕೆ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ.

ಪ್ರತಿ ಚಿತ್ರದ ಬಿಡುಗಡೆಗೂ ಮುನ್ನ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡುವ ಪದ್ಧತಿಯನ್ನು ಯಶ್ ಮುಂದುವರಿಸಿಕೊಂಡು ಬರುತ್ತಿದ್ದಾರೆ. ಈ ಬಾರಿಯೂ ಅದೇ ಸಂಪ್ರದಾಯವನ್ನು ಪಾಲಿಸುತ್ತಿರುವುದು ಅಭಿಮಾನಿಗಳ ಗಮನ ಸೆಳೆದಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಯಶ್ ಆಗಮಿಸಿದ ಸುದ್ದಿ ತಿಳಿಯುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ನಟನನ್ನು ಕಣ್ತುಂಬಿಕೊಳ್ಳಲು ಉತ್ಸಾಹ ವ್ಯಕ್ತಪಡಿಸಿದರು.









