ಸರ್ಕಾರದ ‘ಸುಭದ್ರಾ ಯೋಜನೆ’ಯಿಂದ ಬಂದ ಹಣದ ವಿಚಾರವಾಗಿ ಪತಿ-ಪತ್ನಿ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಬಳಿಕ ಪ್ರಕರಣವನ್ನು ಮುಚ್ಚಿಹಾಕಲು ಪತ್ನಿಯ ಮೃತದೇಹವನ್ನು ಮನೆಯ ಹಿಂಭಾಗದಲ್ಲಿದ್ದ ಸೆಪ್ಟಿಕ್ ಟ್ಯಾಂಕ್ನಲ್ಲಿ ಹೂತುಹಾಕಿದ್ದಾನೆ ಎನ್ನಲಾಗಿದೆ. ಒಡಿಶಾದ ಢೆಂಕನಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ಇಂದಿಪುರ ಗ್ರಾಮದ ಜುವಾಂಗ್ ಸಾಹಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಆರೋಪಿ ಗಿರೀಶ್ ಪ್ರಧಾನ್ನನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಶುಕ್ರವಾರ ರಾತ್ರಿ ಹಣದ ವಿಚಾರವಾಗಿ ವಾಗ್ವಾದ ನಡೆದಿದ್ದು, ಮದ್ಯದ ಅಮಲಿನಲ್ಲಿದ್ದ ಆರೋಪಿ ಮರದ ದೊಣ್ಣೆ ಹಾಗೂ ಕಬ್ಬಿಣದ ರಾಡ್ನಿಂದ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಬಳಿಕ ಮೃತಪಟ್ಟಿದ್ದು, ಮೃತದೇಹವನ್ನು ಮನೆಯ ಹಿಂಭಾಗದ ಸೆಪ್ಟಿಕ್ ಟ್ಯಾಂಕ್ನಲ್ಲಿ ಹೂತುಹಾಕಿ ಕೃತ್ಯ ಮುಚ್ಚಿಹಾಕಲು ಯತ್ನಿಸಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ವೈಜ್ಞಾನಿಕ ತನಿಖಾ ತಂಡ ಪರಿಶೀಲನೆ ನಡೆಸಿ, ಸೆಪ್ಟಿಕ್ ಟ್ಯಾಂಕ್ನಿಂದ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಕೊಲೆಗೆ ಕಾರಣವಾದ ನಿಖರ ಘಟನೆಗಳ ಸರಮಾಲೆಯನ್ನು ಪತ್ತೆಹಚ್ಚಲು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.








