ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ (ಕೆಆರ್ಐಡಿಎಲ್) ಸಂಸ್ಥೆಯ ಇಂಜಿನಿಯರ್ಗಳು ಉಸ್ತುವಾರಿ ಸಚಿವರ ಹೆಸರಿನಲ್ಲಿ ಕಮಿಷನ್ ಪಡೆಯುತ್ತಿದ್ದಾರೆ ಎಂಬ ಪುತ್ತೂರು ಶಾಸಕ ಅಶೋಕ್ ರೈ ಅವರ ಆರೋಪವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಈಶ್ವರ ಬಿ. ಖಂಡ್ರೆ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದ್ದಾರೆ.
ಉಸ್ತುವಾರಿ ಸಚಿವರು ಅಥವಾ ಇಲಾಖೆಯ ಸಚಿವರ ಹೆಸರಿನಲ್ಲಿ ಇಲಾಖೆಯ ಸಿಬ್ಬಂದಿ ಅಥವಾ ಅಧಿಕಾರಿಗಳು ಹಣ ವಸೂಲಿ ಮಾಡಿರುವುದು ಸಾಬೀತಾದರೆ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.
ಮಂಗಳೂರು ಕೆಆರ್ಐಡಿಎಲ್ನ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಕಿರಿಯ ಇಂಜಿನಿಯರ್ ವಿರುದ್ಧದ ಭ್ರಷ್ಟಾಚಾರ ಆರೋಪಗಳಲ್ಲಿ ಸತ್ಯಾಂಶವಿದೆಯೇ ಎಂಬುದನ್ನು ಪರಿಶೀಲಿಸಲು ಸೂಪರಿಂಟೆಂಡೆಂಟ್ ಇಂಜಿನಿಯರ್ ದರ್ಜೆಯ ಅಧಿಕಾರಿಯ ನೇತೃತ್ವದಲ್ಲಿ ತ್ರಿಸದಸ್ಯ ತನಿಖಾ ತಂಡ ರಚಿಸಲಾಗಿದೆ. ಆರೋಪ ಸತ್ಯವೆಂದು ಕಂಡುಬಂದರೆ ಶಿಸ್ತು ಕ್ರಮಕ್ಕೆ ಶಿಫಾರಸು ಸೇರಿದಂತೆ ಏಳು ದಿನಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಇದೇ ವೇಳೆ, ಕೆಆರ್ಐಡಿಎಲ್ ವ್ಯವಸ್ಥಾಪಕ ನಿರ್ದೇಶಕರು ಕಮಿಷನ್ ಆರೋಪದ ಕುರಿತು ಸ್ಪಷ್ಟನೆ ನೀಡಿದ್ದು, ಸಂಸ್ಥೆಗೆ ಪ್ರತ್ಯೇಕ ಅನುದಾನ ಇಲ್ಲದ ಕಾರಣ ಗುತ್ತಿಗೆ ಕಾಮಗಾರಿಗಳಲ್ಲಿ ಒಟ್ಟು ಶೇ.10ರಷ್ಟು ಮೊತ್ತವನ್ನು ಸಂಸ್ಥೆಯ ನಿಯಮದಂತೆ ಕಡಿತ ಮಾಡಲಾಗುತ್ತದೆ. ಇದು ಭ್ರಷ್ಟಾಚಾರವಲ್ಲ, ಸಂಸ್ಥೆಯ ನಿಯಮದ ಭಾಗವಾಗಿದೆ ಎಂದು ತಿಳಿಸಿದ್ದಾರೆ.
ಕೆಆರ್ಐಡಿಎಲ್ನ ಪ್ರಕಾರ, ಅಂದಾಜು ವೆಚ್ಚದ ಮೇಲೆ ಶೇ.3ರಷ್ಟು ಸಂಸ್ಥೆಯ ಸೇವಾ ಶುಲ್ಕ ಮತ್ತು ಗುತ್ತಿಗೆದಾರರ ಉಳಿತಾಯದ ಶೇ.7ರಷ್ಟು ಮೊತ್ತವನ್ನು ಸೇರಿಸಿ ಒಟ್ಟು ಶೇ.10ರಷ್ಟು ಮೊತ್ತವನ್ನು ಸಂಸ್ಥೆಯ ಖಾತೆಗೆ ಜಮಾ ಮಾಡಲಾಗುತ್ತದೆ. ಇದೇ ಸಂಸ್ಥೆಯಲ್ಲಿ ಜಾರಿಯಲ್ಲಿರುವ ನಿಯಮ ಎಂದು ವ್ಯವಸ್ಥಾಪಕ ನಿರ್ದೇಶಕರು ವಿವರಿಸಿದ್ದಾರೆ.
ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 1,800 ಖಾಯಂ ಹಾಗೂ ಹೊರಗುತ್ತಿಗೆ ಸಿಬ್ಬಂದಿಯ ವೇತನ ಮತ್ತು ಇತರ ಆಡಳಿತಾತ್ಮಕ ವೆಚ್ಚಗಳನ್ನು ಈ ಮೊತ್ತದಿಂದಲೇ ಭರಿಸಲಾಗುತ್ತದೆ. ಸರ್ಕಾರದಿಂದ ಸಂಸ್ಥೆಗೆ ವೇತನ, ಭತ್ಯೆ ಸೇರಿದಂತೆ ಆಡಳಿತಾತ್ಮಕ ವೆಚ್ಚಕ್ಕಾಗಿ ಪ್ರತ್ಯೇಕ ಅನುದಾನ ನೀಡಲಾಗುವುದಿಲ್ಲ ಎಂದು ಕೆಆರ್ಐಡಿಎಲ್ ತಿಳಿಸಿದೆ.
ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿರುವಂತೆ, ಅಧಿಕಾರಿಗಳು ಶೇ.3ರಷ್ಟು ಸೇವಾ ಶುಲ್ಕ ಹಾಗೂ ಗುತ್ತಿಗೆದಾರರ ಉಳಿತಾಯದ ಶೇ.7ರಷ್ಟು ಮೊತ್ತವನ್ನು ಕಡಿತ ಮಾಡಿ ಸಂಸ್ಥೆಯ ಖಾತೆಗೆ ಜಮಾ ಮಾಡಿದ್ದಾರೆ ಎಂದು ಕೆಆರ್ಐಡಿಎಲ್ ಸ್ಪಷ್ಟಪಡಿಸಿದೆ. ಹೀಗಾಗಿ ಶಾಸಕರು ಉಲ್ಲೇಖಿಸಿರುವ ಅಂಶದಲ್ಲಿ ತಪ್ಪಿಲ್ಲ, ಆದರೆ ಇದು ಸಂಸ್ಥೆಯ ನಿಯಮದಂತೆ ನಡೆಯುವ ಪ್ರಕ್ರಿಯೆಯಾಗಿದ್ದು ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ವ್ಯವಸ್ಥಾಪಕ ನಿರ್ದೇಶಕರು ಹೇಳಿದ್ದಾರೆ.








