ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ವಾಜರಹಳ್ಳಿಯಲ್ಲಿ ಮನಕಲಕುವ ಘಟನೆ ನಡೆದಿದೆ. ತನ್ನಿಬ್ಬರು ಅವಳಿ ಹೆಣ್ಣು ಮಕ್ಕಳನ್ನು ತಾಯಿ ಉಮಾದೇವಿ (42) ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ತಾಯಿ ಉಮಾದೇವಿ ದಂಪತಿಗೆ ಮಕ್ಕಳಾಗದೇ ತೀವ್ರ ನೊಂದಿದ್ದರು. ಹೀಗಾಗಿ ಐವಿಎಫ್ ಚಿಕಿತ್ಸೆಯ ಮೂಲಕ ಅವರಿಗೆ ಅವಳಿ ಹೆಣ್ಣು ಮಕ್ಕಳು ಜನಿಸಿದ್ದರು. ಮಕ್ಕಳ ಜನನದ ನಂತರ ಉಮಾದೇವಿ ಅವರ ಮಾನಸಿಕ ಸ್ಥಿತಿಯಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು ಎನ್ನಲಾಗಿದೆ.
ಮಂಗಳವಾರ ಸಂಜೆ ಪತಿ ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾಯಿ ಉಮಾದೇವಿ ಇಬ್ಬರು ಮಕ್ಕಳಿಗೆ ಉಸಿರುಗಟ್ಟಿಸಿ ಹತ್ಯೆ ಮಾಡಿ ಬಳಿಕ ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲಸ ಮುಗಿಸಿ ಮನೆಗೆ ಮರಳಿದ ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತಿರುವುದನ್ನು ಗಮನಿಸಿದ ಪತಿ ಕೂಡಲೇ ಆಕೆಯನ್ನು ರಕ್ಷಿಸಿದ್ದಾರೆ. ಆದರೆ ಇಬ್ಬರು ಪುಟ್ಟ ಮಕ್ಕಳು ಮೃತಪಟ್ಟಿದ್ದರು. ವಿಷಯ ತಿಳಿಯುತ್ತಿದ್ದಂತೆ ತಲಘಟ್ಟಪುರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ಸದ್ಯ ಉಮಾದೇವಿ ಅವರನ್ನು ಚಿಕಿತ್ಸೆ ಹಾಗೂ ಮಾನಸಿಕ ಆರೋಗ್ಯ ತಪಾಸಣೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪತಿಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಮಕ್ಕಳ ಜನನದ ಬಳಿಕ ಉಮಾದೇವಿ ಅವರ ಮಾನಸಿಕ ಸ್ಥಿತಿಯಲ್ಲಿ ಉಂಟಾಗಿದ್ದ ಬದಲಾವಣೆ, ಅವರು ಎದುರಿಸುತ್ತಿದ್ದ ಸಮಸ್ಯೆಗಳು ಹಾಗೂ ಘಟನೆಗೆ ಕಾರಣವಾದ ಪರಿಸ್ಥಿತಿಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.








