ಮಂಗಳೂರು: ಕರಾವಳಿ ಹಾಗೂ ಮಲೆನಾಡಿನ ಪ್ರವಾಸೋದ್ಯಮವನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊಸ ಯೋಜನೆಗಳಿಗೆ ಮುಂದಾಗಿದೆ. ನದಿ, ಸಮುದ್ರ, ಬೀಚ್ ಮತ್ತು ಬಂದರುಗಳನ್ನು ಪ್ರವಾಸೋದ್ಯಮದೊಂದಿಗೆ ಸಮಗ್ರವಾಗಿ ಬೆಸೆಯುವ ಮೂಲಕ ಪ್ರವಾಸಿಗರಿಗೆ ವಿಭಿನ್ನ ಅನುಭವ ನೀಡುವುದು ಹಾಗೂ ಸ್ಥಳೀಯರಿಗೆ ಉದ್ಯೋಗ ಮತ್ತು ಆದಾಯದ ಅವಕಾಶ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ಮಂಗಳೂರಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸ್ಥಳೀಯ ಪರಿಸ್ಥಿತಿಯನ್ನು ಪರಿಶೀಲಿಸಿದ ಸಚಿವರು, ನೇತ್ರಾವತಿ ನದಿ, ತಣ್ಣೀರುಬಾವಿ ಬ್ಲೂ ಫ್ಲ್ಯಾಗ್ ಬೀಚ್ ಮತ್ತು ನ್ಯೂ ಮಂಗಳೂರು ಬಂದರು ಸೇರಿದಂತೆ ವಿವಿಧ ಪ್ರದೇಶಗಳ ಅಭಿವೃದ್ಧಿ ಸಾಧ್ಯತೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ನೇತ್ರಾವತಿ ನದಿಯನ್ನು ಪ್ರವಾಸೋದ್ಯಮದ ಪ್ರಮುಖ ಆಕರ್ಷಣೆಯಾಗಿ ರೂಪಿಸಲು ರಿವರ್ ಕ್ರೂಸ್ ಮತ್ತು ಹೌಸ್ಬೋಟ್ ಸೇವೆಗಳನ್ನು ಪರಿಚಯಿಸುವ ಬಗ್ಗೆ ಯೋಜನೆ ರೂಪಿಸಲಾಗುತ್ತಿದೆ. ಈ ಯೋಜನೆಗಳಿಂದ ಪ್ರವಾಸಿಗರಿಗೆ ಹೊಸ ಅನುಭವ ದೊರೆಯುವುದರ ಜೊತೆಗೆ ಮೀನುಗಾರರು ಹಾಗೂ ಕರಾವಳಿ ಭಾಗದ ಜನರಿಗೆ ಪ್ರವಾಸೋದ್ಯಮದ ಮೂಲಕ ಹೊಸ ಆದಾಯದ ಮೂಲ ಸೃಷ್ಟಿಯಾಗಲಿದೆ.
ಇದೇ ವೇಳೆ ನ್ಯೂ ಮಂಗಳೂರು ಬಂದರನ್ನು ಕ್ರೂಸ್ ಪ್ರವಾಸೋದ್ಯಮದ ಪ್ರಮುಖ ಕೇಂದ್ರವಾಗಿ ಬಳಸಿಕೊಳ್ಳುವ ಸಾಧ್ಯತೆಗಳ ಬಗ್ಗೆಯೂ ಸರ್ಕಾರ ಗಮನಹರಿಸಿದೆ. ಮಂಗಳೂರು, ಕಾರವಾರ ಮತ್ತು ಗೋವಾವನ್ನು ಸಂಪರ್ಕಿಸುವ ದೇಶೀಯ ಕ್ರೂಸ್ ಪ್ರವಾಸೋದ್ಯಮಕ್ಕೆ ಖಾಸಗಿ ಹಾಗೂ ಅಂತರರಾಷ್ಟ್ರೀಯ ಸಂಸ್ಥೆಗಳನ್ನು ಸೆಳೆಯಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಅಗತ್ಯವಿರುವ ಜೆಟ್ಟಿ ಮತ್ತು ಇತರ ಮೂಲಸೌಕರ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅನುಮತಿ ಪಡೆಯುವ ಪ್ರಕ್ರಿಯೆಯಲ್ಲೂ ಸಮನ್ವಯ ಸಾಧಿಸಲಾಗುತ್ತಿದೆ.
ಬೀಚ್ ಪ್ರವಾಸೋದ್ಯಮಕ್ಕೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ತಣ್ಣೀರುಬಾವಿ ಬ್ಲೂ ಫ್ಲ್ಯಾಗ್ ಬೀಚ್ ಸೇರಿದಂತೆ ಪ್ರಮುಖ ಕಡಲತೀರಗಳಲ್ಲಿ ಪ್ರವಾಸಿಗರಿಗೆ ಉತ್ತಮ ಸೌಲಭ್ಯಗಳನ್ನು ಕಲ್ಪಿಸಲು ನಿರ್ಧರಿಸಲಾಗಿದೆ. ಆಹಾರ ಮಳಿಗೆಗಳು, ಶ್ಯಾಕ್ಗಳು, ಸ್ವಚ್ಛತಾ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸಲಾಗುವುದು. ತಣ್ಣೀರುಬಾವಿ ಬೀಚ್ನ ಮೊದಲ ಹಂತದ ಕಾಮಗಾರಿಯನ್ನು ಆರು ತಿಂಗಳೊಳಗೆ ಪೂರ್ಣಗೊಳಿಸುವ ಗುರಿ ಹಾಕಿಕೊಳ್ಳಲಾಗಿದೆ.
ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಯೋಜನೆಗಳಿಗೆ CRZ ನಿಯಮಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ, ಪರಿಸರ ಸಂರಕ್ಷಣೆಗೆ ಧಕ್ಕೆಯಾಗದ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಇತರ ಕರಾವಳಿ ರಾಜ್ಯಗಳಲ್ಲಿ ನಿಯಮಗಳ ಅನುಸಾರ ಕೈಗೊಂಡಿರುವ ಅಭಿವೃದ್ಧಿ ಮಾದರಿಗಳನ್ನು ಪರಿಶೀಲಿಸಿ, ಅಗತ್ಯ ಅನುಮತಿಗಳಿಗಾಗಿ ಕೇಂದ್ರದೊಂದಿಗೆ ಚರ್ಚಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ವಾಟರ್ ಸ್ಪೋರ್ಟ್ಸ್ ಹಾಗೂ ಸಾಹಸ ಪ್ರವಾಸೋದ್ಯಮವನ್ನು ವಿಸ್ತರಿಸುವ ಮುನ್ನ ಮೂಲಸೌಕರ್ಯ ಬಲಪಡಿಸುವುದಕ್ಕೂ ಒತ್ತು ನೀಡಲಾಗಿದೆ. ಪ್ರವಾಸಿ ತಾಣಗಳಿಗೆ ಉತ್ತಮ ರಸ್ತೆ ಸಂಪರ್ಕ, ಪ್ರವೇಶ ಮಾರ್ಗ, ಸುರಕ್ಷತಾ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿದ ಬಳಿಕ ಖಾಸಗಿ ಹೂಡಿಕೆದಾರರು ಹಾಗೂ ವಾಟರ್ ಸ್ಪೋರ್ಟ್ಸ್ ಸಂಸ್ಥೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿಸುವ ಉದ್ದೇಶವಿದೆ.
ಇನ್ನು ಹೋಂಸ್ಟೇಗಳ ಹೆಸರಿನಲ್ಲಿ ವಾಣಿಜ್ಯ ಲಾಡ್ಜ್ ಅಥವಾ ಹೋಟೆಲ್ ಚಟುವಟಿಕೆ ನಡೆಸುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಪ್ರವಾಸಿಗರಿಗೆ ಸ್ಥಳೀಯ ಸಂಸ್ಕೃತಿ ಮತ್ತು ಜೀವನಶೈಲಿಯನ್ನು ಪರಿಚಯಿಸುವ ನೈಜ ಹೋಂಸ್ಟೇ ವ್ಯವಸ್ಥೆಗೆ ಮಾತ್ರ ಉತ್ತೇಜನ ನೀಡಲಾಗುವುದು. ಇದಕ್ಕಾಗಿ ಹೋಂಸ್ಟೇ ಮತ್ತು ವಾಣಿಜ್ಯ ವಸತಿ ವ್ಯವಸ್ಥೆಗಳ ನಡುವಿನ ವ್ಯತ್ಯಾಸವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು.
ಕರಾವಳಿ ಪ್ರವಾಸೋದ್ಯಮದ ಹೆಸರಿನಲ್ಲಿ ಕ್ಯಾಸಿನೋ ಸಂಸ್ಕೃತಿಗೆ ಅವಕಾಶ ನೀಡುವ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ ಎಂದು ಕೆ.ಜೆ. ಜಾರ್ಜ್ ಹೇಳಿದ್ದಾರೆ. ಸ್ಥಳೀಯ ಸಮುದಾಯ, ಮೀನುಗಾರರು ಹಾಗೂ ಸಣ್ಣ ಉದ್ಯಮಿಗಳಿಗೆ ನೇರ ಪ್ರಯೋಜನವಾಗುವ ರೀತಿಯಲ್ಲಿ ಪ್ರವಾಸೋದ್ಯಮ ಬೆಳೆಸುವುದು ಸರ್ಕಾರದ ಗುರಿಯಾಗಿದೆ. ಪರಿಸರ ರಕ್ಷಣೆ ಮತ್ತು ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡುತ್ತಲೇ ಮಂಗಳೂರನ್ನು ಪ್ರಮುಖ ಕರಾವಳಿ ಹಾಗೂ ಕ್ರೂಸ್ ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸುವ ಉದ್ದೇಶ ಹೊಂದಲಾಗಿದೆ.
ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್ ಅವರು, ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕಾಗಿ ರೂಪಿಸಿರುವ ಪ್ರತ್ಯೇಕ ನೀತಿಯಡಿ ರಿವರ್ ಕ್ರೂಸ್, ಹೌಸ್ಬೋಟ್, ಬೀಚ್ ಮತ್ತು ಇತರ ಪ್ರವಾಸೋದ್ಯಮ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಪ್ರವಾಸೋದ್ಯಮದ ಬೆಳವಣಿಗೆಯೊಂದಿಗೆ ಸ್ಥಳೀಯರಿಗೆ ಉದ್ಯೋಗ, ಆದಾಯ ಹಾಗೂ ಸಣ್ಣ ಉದ್ಯಮಗಳ ಅವಕಾಶ ಸಿಗುವಂತೆ ಯೋಜನೆಗಳನ್ನು ರೂಪಿಸಲಾಗುವುದು. ಪರಿಸರ ಸಂರಕ್ಷಣೆ, ಮೂಲಸೌಕರ್ಯ ಮತ್ತು ಪ್ರವಾಸಿಗರ ಸುರಕ್ಷತೆಗೂ ಸಮಾನ ಆದ್ಯತೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.








