ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭ್ರಷ್ಟಾಚಾರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಲೋಕಾಯುಕ್ತ ಪೊಲೀಸರು, ವಿವಿಧ ತಾಲೂಕುಗಳ ಒಟ್ಟು ೭ ಗ್ರಾಮ ಪಂಚಾಯತಿ ಕಚೇರಿಗಳ ಮೇಲೆ ಏಕಕಾಲಕ್ಕೆ ಸಮಗ್ರ ದಾಳಿ ನಡೆಸಿ ವ್ಯಾಪಕ ಪರಿಶೀಲನೆ ಕೈಗೊಂಡಿದ್ದಾರೆ. ಸಾರ್ವಜನಿಕರಿಂದ ಸರಣಿ ಭ್ರಷ್ಟಾಚಾರ, ಖಾತಾ ಬದಲಾವಣೆ, ಸರ್ಕಾರದ ಯೋಜನೆಗಳ ಅನುಷ್ಠಾನ ಹಾಗೂ ಸಾರ್ವಜನಿಕ ಕೆಲಸಗಳಲ್ಲಿ ಅಕ್ರಮ ಮತ್ತು ಲಂಚದ ಬೇಡಿಕೆ ಕುರಿತು ಸಾಲು ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಮಹತ್ವದ ಕಾರ್ಯಾಚರಣೆ ನಡೆದಿದೆ. ಮಂಗಳೂರು ತಾಲೂಕಿನ ಪೆರ್ಮುದೆ ಗ್ರಾಮ ಪಂಚಾಯತಿ, ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತಿ, ಮಾಣಿ ಗ್ರಾಮ ಪಂಚಾಯತಿ, ಗೊಳ್ತಮಜಲು ಗ್ರಾಮ ಪಂಚಾಯತಿ, ಪಾಣೆಮಂಗಳೂರು / ಅಡ್ಯಾರ್ ಗ್ರಾಮ ಪಂಚಾಯತಿ, ಕುವೆಟ್ಟು ಗ್ರಾಮ ಪಂಚಾಯತಿ, ಮಡಂತ್ಯಾರ್ ಗ್ರಾಮ ಪಂಚಾಯತಿ, ಕಾರವಾರ, ಉಡುಪಿ ಹಾಗೂ ಮಂಗಳೂರು ವಿಭಾಗಗಳ ಲೋಕಾಯುಕ್ತ ಅಧಿಕಾರಿಗಳ ನೇತೃತ್ವದಲ್ಲಿ ಪ್ರತ್ಯೇಕ ತಂಡಗಳನ್ನು ರಚಿಸಿಕೊಂಡು ಏಕಕಾಲಕ್ಕೆ ಈ ೭ ಪಂಚಾಯತ್ ಕಚೇರಿಗಳಿಗೆ ದಾಳಿ ನಡೆಸಲಾಗಿದೆ. ಕಚೇರಿಯಲ್ಲಿದ್ದ ಪ್ರಮುಖ ಕಡತಗಳು, ಸಾರ್ವಜನಿಕರ ಅರ್ಜಿ ವಿಲೇವಾರಿ ರಿಜಿಸ್ಟರ್, ತೆರಿಗೆ ವಸೂಲಾತಿ, ನಿರ್ಮಾಣ ಪರವಾನಗಿ ಹಾಗೂ ೧೫ನೇ ಹಣಕಾಸು ಯೋಜನೆಗಳ ಅನುದಾನ ಬಳಕೆಯ ಕಡತಗಳನ್ನು ಅಧಿಕಾರಿಗಳು ಜಾಲಾಡುತ್ತಿದ್ದಾರೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDO), ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿಯನ್ನು ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಸಾರ್ವಜನಿಕರ ದೂರುಗಳಿಗೆ ಸಂಬಂಧಿಸಿದಂತೆ ವಿವರಣೆ ಪಡೆಯಲಾಗುತ್ತಿದೆ. ಲೋಕಾಯುಕ್ತರ ಈ ದಿಢೀರ್ ಪ್ರಹಾರದಿಂದ ಗ್ರಾಮೀಣ ಭಾಗದ ಭ್ರಷ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ








