ಬೈಂದೂರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದ ವಾಹನವೊಂದನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆ, ಲಾರಿಯೊಂದು ನಿಯಂತ್ರಣ ತಪ್ಪಿ ಸರಣಿ ಅಪಘಾತ ಎಸಗಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಸಮೀಪ ಗುರುವಾರ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ, ಶಿರೂರು ನಿವಾಸಿ ನಾಗೇಂದ್ರ ಮಹಾಲೆ (45) ಎಂಬುವವರು ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಶಿರೂರು ಸಮೀಪದ ಹೆದ್ದಾರಿಯಲ್ಲಿ ಸರಕು ತುಂಬಿದ್ದ ಲಾರಿಯೊಂದು ಅಪಘಾತಕ್ಕೀಡಾಗಿತ್ತು. ಆ ವಾಹನವನ್ನು ತೆರವುಗೊಳಿಸಲು ಹೆದ್ದಾರಿ ನಿರ್ವಹಣಾ ಸಿಬ್ಬಂದಿ ಬ್ಯಾರಿಕೇಡ್ಗಳನ್ನು ಅಳವಡಿಸಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ತಡೆಹಿಡಿದಿದ್ದರು. ಈ ವೇಳೆ ರಸ್ತೆಯಲ್ಲಿ ಹಲವು ವಾಹನಗಳು ಸಾಲಾಗಿ ನಿಂತಿದ್ದವು. ಇಳಿಜಾರು ರಸ್ತೆಯಾಗಿದ್ದ ಕಾರಣ, ಕೇರಳದಿಂದ ಮಹಾರಾಷ್ಟ್ರದ ಕಡೆಗೆ ರಬ್ಬರ್ ಸಾಗಿಸುತ್ತಿದ್ದ ಮತ್ತೊಂದು ಲಾರಿ ಅತಿವೇಗವಾಗಿ ಬಂದು ಚಾಲಕನ ನಿಯಂತ್ರಣ ತಪ್ಪಿದೆ. ಭರದಿಂದ ನುಗ್ಗಿದ ಲಾರಿಯು ಹೆದ್ದಾರಿ ಗಸ್ತು ತಿರುಗುವಿಕೆಯ ಪೊಲೀಸ್ ವಾಹನಕ್ಕೆ ಹಾಗೂ ನಿಂತಿದ್ದ ನಾಲ್ಕು ದ್ವಿಚಕ್ರ ವಾಹನಗಳಿಗೆ ಸರಣಿಯಾಗಿ ಡಿಕ್ಕಿ ಹೊಡೆದಿದೆ.
ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ನಾಗೇಂದ್ರ ಮಹಾಲೆ ತೀವ್ರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಬೈಂದೂರು ವೃತ್ತ ನಿರೀಕ್ಷಕ (CPI) ಸಂತೋಷ್ ಕಾಯ್ಕಿಣಿ ಹಾಗೂ ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಘಟನೆಗೆ ಸಂಬಂಧಿಸಿದಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕನ ನಿರ್ಲಕ್ಷ್ಯದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.







