ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಸುರಿದ ಭಾರಿ ಮಳೆಯಿಂದಾಗಿ ವಿದ್ಯಾರ್ಥಿಗಳಿಗೆ ನೀಡಿದ್ದ ರಜೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸೆಪ್ಟೆಂಬರ್ 12ರಿಂದ ಪ್ರತಿ ಶನಿವಾರವೂ ಪೂರ್ಣ ದಿನ ತರಗತಿಗಳನ್ನು ನಡೆಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರು ಸೂಚನೆ ನೀಡಿದ್ದಾರೆ.
ಈ ಮುಂಗಾರು ಅವಧಿಯಲ್ಲಿ ನಿರಂತರವಾಗಿ ಸುರಿದ ಭಾರಿ ಮಳೆಯಿಂದಾಗಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಜಿಲ್ಲಾಡಳಿತವು ೧೦ಕ್ಕೂ ಹೆಚ್ಚು ದಿನ ಅನಿರೀಕ್ಷಿತ ರಜೆ ಘೋಷಿಸಿತ್ತು. ಇದರಿಂದ ಶಾಲೆಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಯಾಗಿದ್ದು, ಪಠ್ಯಕ್ರಮ ಪೂರ್ಣಗೊಳಿಸುವ ವೇಳಾಪಟ್ಟಿಯಲ್ಲೂ ವಿಳಂಬ ಉಂಟಾಗಿತ್ತು. ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಸಿಲೆಬಸ್ ಪೂರ್ಣಗೊಳಿಸುವಲ್ಲಿ ಹಿನ್ನಡೆ ಅನುಭವಿಸಿದ್ದವು.
ಪಠ್ಯಕ್ರಮ ಪೂರ್ಣಗೊಳಿಸಲು ವಿಶೇಷ ಕ್ರಮ
ಶೈಕ್ಷಣಿಕ ಹಿನ್ನಡೆಯನ್ನು ಸರಿದೂಗಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳು ಮುಂದಿನ ಶನಿವಾರಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳುವುದರ ಜೊತೆಗೆ ವಿಶೇಷ ಪರಿಹಾರ ತರಗತಿಗಳನ್ನು ನಡೆಸುವಂತೆ ಶಾಲೆಗಳಿಗೆ ನಿರ್ದೇಶನ ನೀಡಲಾಗಿದೆ.
ಹೊಸ ಮಾರ್ಗಸೂಚಿಯಂತೆ, ಇದುವರೆಗೆ ಅರ್ಧ ದಿನ ಮಾತ್ರ ನಡೆಯುತ್ತಿದ್ದ ಶನಿವಾರದ ತರಗತಿಗಳನ್ನು ಸೆಪ್ಟೆಂಬರ್ 12ರಿಂದ ಪೂರ್ಣ ದಿನ ನಡೆಸಬೇಕು. ಅಲ್ಲದೆ, ಕಳೆದುಹೋದ ಬೋಧನಾ ಅವಧಿಯನ್ನು ಸರಿದೂಗಿಸಲು ವಿಶೇಷ ತರಗತಿಗಳನ್ನು ಆಯೋಜಿಸುವುದು ಹಾಗೂ ಉಳಿದ ಸಾಮಾನ್ಯ ರಜೆ ದಿನಗಳನ್ನು ಅಗತ್ಯಕ್ಕೆ ಅನುಗುಣವಾಗಿ ಬಳಸಿಕೊಳ್ಳುವಂತೆ ಶಾಲೆಗಳಿಗೆ ಸೂಚಿಸಲಾಗಿದೆ.
ಪ್ರತಿ ಶಾಲೆಯ ಆಡಳಿತ ಮಂಡಳಿಗೆ ತಮ್ಮ ಶಾಲೆಯ ಅಗತ್ಯಕ್ಕೆ ಅನುಗುಣವಾಗಿ ಪಠ್ಯಕ್ರಮ ಪೂರ್ಣಗೊಳಿಸುವ ವಿಶೇಷ ವೇಳಾಪಟ್ಟಿಯನ್ನು ರೂಪಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಆದರೆ, ಹೆಚ್ಚುವರಿ ತರಗತಿಗಳು ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸಮರ್ಪಕ ದಾಖಲೆಗಳನ್ನು ನಿರ್ವಹಿಸುವುದು ಕಡ್ಡಾಯ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಹೆಚ್ಚುವರಿ ತರಗತಿಗಳ ಹಾಜರಾತಿ, ತರಗತಿಗಳ ವಿವರ ಹಾಗೂ ಇತರ ದಾಖಲೆಗಳನ್ನು ವ್ಯವಸ್ಥಿತವಾಗಿ ಸಂಗ್ರಹಿಸಿಟ್ಟುಕೊಳ್ಳಬೇಕು. ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಈ ದಾಖಲೆಗಳನ್ನು ಹಾಜರುಪಡಿಸುವಂತೆ ಸೂಚಿಸಲಾಗಿದೆ.
ಮಂಗಳೂರು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಈಗಾಗಲೇ ಪರಿಷ್ಕೃತ ಶೈಕ್ಷಣಿಕ ವೇಳಾಪಟ್ಟಿಯನ್ನು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ತಿಳಿಸಿವೆ.








