ಟಿ. ನರಸೀಪುರ (ಮೈಸೂರು) : ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪೊಲೀಸ್ ಇನ್ಸ್ಪೆಕ್ಟರ್ ಧನಂಜಯ್ ಅವರಿಗೆ ಹಿಂದೂ ಜಾಗರಣ ವೇದಿಕೆ ಬಹಿರಂಗವಾಗಿ ಸೆಡ್ಡು ಹೊಡೆದಿದೆ. ಪೊಲೀಸ್ ಠಾಣೆಯ ಕೆಲವೇ 200 ಮೀಟರ್ ಅಂತರದಲ್ಲಿ ‘ಹಿಂದೂ ಮಹಾಗಣಪತಿ’ ವಿಗ್ರಹವನ್ನು ಪ್ರತಿಷ್ಠಾಪಿಸಿ, ಸೆಪ್ಟೆಂಬರ್ 18ರಂದು ಬೃಹತ್ ಶೋಭಾಯಾತ್ರೆ ನಡೆಸಲು ಸಜ್ಜಾಗಿದೆ.
ಮಸೀದಿ ಮುಂಭಾಗ ಗಣೇಶೋತ್ಸವ ಮೆರವಣಿಗೆ ಸಾಗುವಂತಿಲ್ಲ ಎಂದು ಪೊಲೀಸ್ ಇನ್ಸ್ಪೆಕ್ಟರ್ ವಾರ್ನಿಂಗ್ ನೀಡಿದ್ದರು ಎನ್ನಲಾದ ಘಟನೆ ಇದೀಗ ರಾಜಕೀಯ ಮತ್ತು ಧಾರ್ಮಿಕ ಸಂಘರ್ಷಕ್ಕೆ ಕಾರಣವಾಗಿದೆ.
ಸೆಪ್ಟೆಂಬರ್ 18 ರಂದು ನಗರದ ಲಿಂಕ್ ರಸ್ತೆಯಲ್ಲಿ ಬೃಹತ್ ‘ಹಿಂದೂ ಶೋಭಾಯಾತ್ರೆ’ ನಡೆಸಲು ಹಿಂದೂ ಪರ ಸಂಘಟನೆಗಳು ತೀರ್ಮಾನಿಸಿವೆ. ಈ ಕುರಿತು ಮಾಹಿತಿ ನೀಡಿರುವ ಹಿಂದೂ ಜಾಗರಣ ವೇದಿಕೆಯ ಮಹೇಶ್, “ಮೈಸೂರು ಜಿಲ್ಲೆ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಸುಮಾರು 5,000ಕ್ಕೂ ಹೆಚ್ಚು ಕಾರ್ಯಕರ್ತರು ಈ ಶೋಭಾಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಪೊಲೀಸ್ ಇನ್ಸ್ಪೆಕ್ಟರ್ ಧನಂಜಯ್ ಅವರು ಈ ಶೋಭಾಯಾತ್ರೆಯನ್ನು ಕಣ್ತುಂಬಿಕೊಳ್ಳಲಿ” ಎಂದು ಸವಾಲು ಹಾಕಿದ್ದಾರೆ.
ಗಣೇಶ ಭಕ್ತರಿಗೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾದ ಇನ್ಸ್ಪೆಕ್ಟರ್ ಧನಂಜಯ್ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆಯ ಮುಂಭಾಗ ಧರಣಿ ನಡೆಸಿದ್ದಾರೆ. ಈ ವಿಷಯವಾಗಿ ಆಡಳಿತರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿಯ ನಾಯಕರ ನಡುವೆ ಸರಣಿ ವಾಗ್ದಾಳಿಗಳು ನಡೆದು, ಪ್ರಕರಣವು ತೀವ್ರ ರಾಜಕೀಯ ಪ್ರತಿಷ್ಠೆಯಾಗಿ ಮಾರ್ಪಟ್ಟಿದೆ.
ಲಿಂಕ್ ರಸ್ತೆಯಲ್ಲಿ ಶೋಭಾಯಾತ್ರೆ ನಡೆಸಲು ಸಂಘಟನೆಗಳು ಪಟ್ಟು ಹಿಡಿದಿದ್ದು, ಸೆಪ್ಟೆಂಬರ್ 18ರಂದು ಟಿ. ನರಸೀಪುರದಲ್ಲಿ ನಡೆಯಲಿರುವ ವಿದ್ಯಮಾನಗಳು ಹಾಗೂ ಕಾನೂನು ಸುವ್ಯವಸ್ಥೆಯ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.








