ಚಿಕ್ಕಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಕೊಡೋದಿಲ್ಲ. ಅಲ್ಲಿ ವ್ಯವಸ್ಥೆಗಳು ಸರಿ ಇಲ್ಲ ಎಂಬ ಅಪವಾದ ಮೊದಲಿನಿಂದಲೂ ಇದೆ. ಈಗೀಗ ಅನೇಕ ಶಾಲೆಗಳಲ್ಲಿ ಸುಧಾರಣೆ ತರಲಾಗುತ್ತಿದೆ. ಶಿಕ್ಷಣದಲ್ಲೂ ಗುಣಮಟ್ಟ ಹೆಚ್ಚಿಸಲಾಗುತ್ತಿದೆ. ಸರ್ಕಾರಿ ಶಾಲೆಗಳಿಗೆ ಹೆಚ್ಚಾಗಿ ಹೋಗುವವರು ಬಡವರ ಮತ್ತು ಮಧ್ಯಮ ವರ್ಗದವರ ಮಕ್ಕಳು.
ಅವರು ತಮ್ಮ ಮಕ್ಕಳಿಗೂ ಉತ್ತಮ ಶಿಕ್ಷಣ ಸಿಗಲಿ ಎಂದು ಬಯಸುತ್ತಾರೆ. ಆದರೆ ಚಿಕ್ಕಬಳ್ಳಾಪುರ ತಾಲೂಕಿನ ಸರ್ಕಾರಿ ಶಾಲೆಗಳು ಈಗ ಟೀಕೆಯ ಕೇಂದ್ರಬಿಂದುವಾಗಿವೆ. ಇಲ್ಲಿನ ಹಲವು ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಇನ್ನೂ ಕನ್ನಡ ವರ್ಣಮಾಲೆಯನ್ನೇ ಬರೆಯೋಕೆ ಬರೋದಿಲ್ಲ. ಇಂಥ ಶಾಲೆಗಳು ಈಗ ಶಾಸಕ ಪ್ರದೀಪ್ ಈಶ್ವರ್ ಕೆಂಗಣ್ಣಿಗೆ ಗುರಿಯಾಗಿವೆ.
ವರ್ಣಮಾಲೆಯ ಅಕ್ಷರಗಳೇ ಬರೋದಿಲ್ಲ..
ಶಾಸಕ ಪ್ರದೀಪ್ ಈಶ್ವರ್ ಅವರು ಕ್ಷೇತ್ರ ಸಂಚಾರ ಮಾಡುತ್ತಿದ್ದರು. ಈ ವೇಳೆ ಅವರು ಕೆಲವು ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ, ಅಲ್ಲಿನ ಮಕ್ಕಳು ಮತ್ತು ಶಿಕ್ಷಕರ ಜೊತೆ ಸಂವಾದ ನಡೆಸಿದ್ದರು. ಆದರೆ ಆಗ ಒಂದು ಶಾಕಿಂಗ್ ಸಂಗತಿ ಬೆಳಕಿಗೆ ಬಂದಿದೆ. ಅದೆಷ್ಟೋ ಶಾಲೆಗಳ 7ನೇ ತರಗತಿ ಮಕ್ಕಳಿಗೆ ಕನಿಷ್ಠ ಅ, ಆ, ಇ, ಈ ಅಕ್ಷರಗಳೇ ಬರುವುದಿಲ್ಲ ಎಂಬುವುದನ್ನು ಮನಗಂಡಿದ್ದಾರೆ. ಇದರಿಂದ ಪ್ರದೀಪ್ ಈಶ್ವರ್ ಸಿಟ್ಟಾಗಿದ್ದಾರೆ. ಅಷ್ಟೇ ಅಲ್ಲ, ಈ ಮಕ್ಕಳಿಗೆ 1-6ನೇ ತರಗತಿವರೆಗೆ ಕಲಿಸಿದ ಶಿಕ್ಷಕರಿಗೆ ನೋಟಿಸ್ ಕೊಡಬೇಕು. ಈ ಮಕ್ಕಳಿಗೆ ಕನ್ನಡ ವರ್ಣಮಾಲೆಯ ಅಕ್ಷರಗಳೂ ಬಾರದೆ ಇರೋದಕ್ಕೆ ಕಾರಣ ಕೇಳಬೇಕು ಎಂದು ಕ್ಷೇತ್ರ ಶಿಕ್ಷಣಾಧೀಕಾರಿಗೆ ಸೂಚನೆ ನೀಡಿದ್ದರು. ಅದರಂತೆ 180 ಶಿಕ್ಷಕರಿಗೆ ನೋಟಿಸ್ ನೀಡಲಾಗಿದೆ.
ಏನಿದೆ ನೋಟಿಸ್ನಲ್ಲಿ?
180 ಶಾಸಕರಿಗೆ ನೀಡಲಾದ ನೋಟಿಸ್ನಲ್ಲಿ ಕಾರಣ ಕೇಳಲಾಗಿದೆ. ಶಾಸಕರಾದ ಪ್ರದೀಸ್ ಈಶ್ವರ್ ಅವರು ಚಿಕ್ಕಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿನ ಕೆಲವು ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಪರಿಶೀಲಿಸಿದಾಗ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕೆಯ ಗುಣಮಟ್ಟ ಕಡಿಮೆಯಾಗಿ ಶೈಕ್ಷಣಿಕವಾಗಿ ಹಿಂದುಳಿರುವುದು ಕಂಡು ಬಂದಿರುತ್ತದೆ. ಹೀಗಾಗಿ 2026-27 ನೇ ಸಾಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿನ ಏಳನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಪ್ರಗತಿ ಮತ್ತು ಕಲಿಕೆಯನ್ನು ಪರಿಶೀಲನೆ ಮಾಡಲಾಗಿದೆ. ಕಲಿಕೆಯಲ್ಲಿನ ಗುಣಮಟ್ಟಕ್ಕಿಂತ ಹಿಂದುಳಿದ ವಿದ್ಯಾರ್ಥಿಗಳಿಗೆ ಒಂದನೇ ತರಗತಿಯಿಂದ 7 ನೇ ತರಗತಿವರೆಗೆ ಬೋಧನಾ ಕಾರ್ಯಗಳನ್ನು ನಿರ್ವಹಿಸಿರುವ ಶಿಕ್ಷಕರಿಗೆ ನೋಟೀಸ್ ಜಾರಿ ಮಾಡಲಾಗಿದೆ. ಅಲ್ಲದೆ, ನೋಟಿಸ್ಗೆ ಸಮಜಾಯಿಷಿಯನ್ನು ಪಡೆದು, ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಿ ವರದಿ ನೀಡುವಂತೆ ಸೂಚಿಸಲಾಗಿದೆ.
ಶಾಸಕರ ಪತ್ರದಂತೆ ಈ ಕಛೇರಿಯಿಂದ ಆಯು ಕ್ಷೇತ್ರ ಸಿಬ್ಬಂದಿಗಳಾದ ಶಿಕ್ಷಣ ಸಂಯೋಜಕರು, ಬಿ.ಆರ್.ಪಿ. ಸಿ.ಆರ್.ಪಿ ರವರನ್ನು ನಿಯೋಜಿಸಿ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿನ ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಿ ಕಲಿಕೆಯಲ್ಲಿ ಅತೀ ಹಿಂದುಳಿದಿರುವ ವಿದ್ಯಾರ್ಥಿಗಳ ಪಟ್ಟಿ ಮತ್ತು ಆಯಾ ವಿದ್ಯಾರ್ಥಿಗಳಿಗೆ ಬೋಧನಾ ಕಾರ್ಯಗಳನ್ನು ನಿರ್ವಹಿಸುತ್ತಿರುವ ಶಿಕ್ಷಕರ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಕರ್ನಾಟಕ ಕಡ್ಡಾಯ ಶಿಕ್ಷಣ ಕಾಯಿದೆ ಉಲ್ಲಂಘನೆ ಮತ್ತು ತಮಗೆ ನೀಡಿರುವ ಜವಾಬ್ದಾರಿಗಳನ್ನು ಪರಿಪೂರ್ಣವಾಗಿ ನಿರ್ವಹಿಸಲು ವಿಫಲರಾಗಿರುವುದರಿಂದ ಕರ್ನಾಟಕ ನಾಗರೀಕ ಸೇವಾ ನಿಯುಗಳನ್ವಯ ನಿಮ್ಮ ಮೇಲೇ ಏಕೆ ಶಿಸ್ತು ಕ್ರಮ ಜರುಗಿಸಬಾರದು? ಎಂದು ನೋಟಿಸ್ ನಲ್ಲಿ ಉಲ್ಲೇಖ ಮಾಡಲಾಗಿದೆ. ನೋಟಿಸ್ ತಲುಪಿದ 3 ದಿನಗಳ ಒಳಗಾಗಿ ಶಿಕ್ಷಣಾಧಿಕಾರಿಗಳ ಕಛೇರಿಗೆ ಸೂಕ್ತ ದಾಖಲೆಗಳೊಂದಿಗೆ ಲಿಖಿತ ಸಮಜಾಷಿಯಿ ನೀಡುವಂತೆ ಸೂಚಿಸಲಾಗಿದೆ . ತಪ್ಪಿದಲ್ಲಿ ತಾವು ಹೇಳುವುದು ಏನೂ ಇಲ್ಲವೆಂದು ಭಾವಿಸಿ ಏಕ ಪಕ್ಷೀಯವಾಗಿ ಸಂಬಂಧಿಸಿದ ಶಿಕ್ಷಕರ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂಬುದಾಗಿ ನೋಟಿಸ್ನಲ್ಲಿ ತಿಳಿಸಲಾಗಿದೆ.








